ವಿಧಾನಸಭೆ ಸೋಲು ಮರೆತು ಲೋಕಸಭೆ ಚುನಾವಣೆಗೆ ತಯಾರಾಗಿ: ಪದಾಧಿಕಾರಿಗಳಿಗೆ ಸಿದ್ದು ಕರೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನಿಂದ ಧೃತಿಗೆಡಬೇಡಿ. ರಿಚಾರ್ಜ್ ಆಗುವ ಮೂಲಕ ಲೋಕಸಭೆ ಚುನಾವಣೆಗೆ ಸನ್ನದ್ಧರಾಗಿ ಎಂದು ಶಾಸಕಾಂಗ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಿಗೆ ಕರೆ ನೀಡಿದರು.

ನಗರದ ಗುರುನಾನಕ್ ಭವನದಲ್ಲಿ ಇಂದು ಆಯೋಜಿಸಿದ್ದ ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ನೂರಕ್ಕೆ ನೂರರಷ್ಟು ಇತ್ತು. ಆದರೆ ಬಿಜೆಪಿಯವರು ಮಾಡಿದ ಅಪಪ್ರಚಾರದಿಂದಾಗಿ ನಮಗೆ ಸೋಲಾಯಿತು. ಶೇಕಡಾವಾರು ಮತಗಳಿಕೆಯಲ್ಲಿ ನಾವು ಬಿಜೆಪಿಗಿಂತ ಮುಂದೆ ಇದ್ದೇವೆ. ಆದರೂ ಹೆಚ್ಚು ಸ್ಥಾನಗಳನ್ನು ಗಳಿಸಲು ಆಗಿಲ್ಲ ಎಂದರು.

ಮುಂಬರುವ ಲೋಕಸಭೆ ಚುನಾವಣೆಗೆ ನಾವು ಈಗಿನಿದಲೇ ಸಜ್ಜಾಗೋಣ. ಆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಆಗಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರ ಜನರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿತ್ತು. ಆದರೆ ಬಿಜೆಪಿಯವರು ಹಿಂದುತ್ವದ ಬಗ್ಗೆ ಹೆಚ್ಚು ಪ್ರಚಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ವೈಫಲ್ಯಗಳನ್ನು ಪಟ್ಟಿ ಮಾಡಿ ಹೇಳಿದರೂ ಪ್ರಯೋಜನವಾಗಲಿಲ್ಲ ಎಂದು ತಿಳಿಸಿದರು.

ಆದರೆ ಲೋಕಸಭೆ ಚುನಾವಣೆ ವೇಳೆ ಆ ರೀತಿ ಆಗುವುದಿಲ್ಲ. ನರೇಂದ್ರ ಮೋದಿಯವರು ಕಳೆದ ಐದು ವರ್ಷದಲ್ಲಿ ಹೇಳಿದ್ದೇನು, ಮಾಡಿದ್ದೇನು ಎಂಬುದನ್ನು ಜನರಿಗೆ ವಿವರಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕು. ಎಲ್ಲ ವರ್ಗದವರ ಪರವಾಗಿ ಕೆಲಸ ಮಾಡಿದ ಸರ್ಕಾರ ನಮ್ಮದಾಗಿತ್ತು. ಆದರೆ ಬಿಜೆಪಿಯವರು ಎಲ್ಲ ವರ್ಗದವರ ಪರವಾಗಿ ಇಲ್ಲ. ಸಾಮಾಜಿಕ ನ್ಯಾಯದಲ್ಲಿ ಅವರಿಗೆ ನಂಬಿಕೆಯೇ ಇಲ್ಲ. ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಏಕೈಕ ಪಕ್ಷ ಕಾಂಗ್ರೆಸ್ ಎಂದರು.

ಬಿಜೆಪಿಗೆ ಒಂದು ಸಿದ್ಧಾಂತವೇ ಇಲ್ಲ. ಕೇವಲ ಭಾವನಾತ್ಮಕ ವಿಚಾರಗಳನ್ನು ದೊಡ್ಡದಾಗಿ ಬಿಂಬಿಸಿ ಆ ಮೂಲಕ ಗಲಭೆ ಸೃಷ್ಟಿಮಾಡುವುದೇ ಅವರ ಕೆಲಸ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ನಾಟಕಕಾರ : ಪ್ರಧಾನಿ ನರೇಂದ್ರ ಮೋದಿ ಒಬ್ಬ ನಾಟಕಕಾರ. ಅಂತಹ ನಾಟಕಕಾರರನ್ನು ನಾನು ನೋಡಿಯೇ ಇಲ್ಲ. ಆದರೆ, ಮಾತುಗಳಿಂದ ಜನರನ್ನು ಹೆಚ್ಚು ದಿನ ಮರಳು ಮಾಡಲು ಸಾಧ್ಯವಿಲ್ಲ. ಏಕೆಂದರೆ ಜನರಿಗೆ ಬೇಕಾಗಿರುವುದು ಕಾಮ್ ಕೀ ಬಾತ್. ಮನ್ ಕೀ ಬಾತ್ ಅಲ್ಲವೇ ಅಲ್ಲ ಎಂದು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಕಳೆದ ಐದು ವರ್ಷದಲ್ಲಿ ರಾಜ್ಯದ ರೈತರಿಗೆ ಆಗಿರುವ ಅನ್ಯಾಯ ಅಷ್ಟಿಷ್ಟಲ್ಲ. ರೈತರ ವಿಚಾರದಲ್ಲಿ ಹಲವಾರು ಬಾರಿ ಬರೆದ ಪತ್ರಗಳಿಗೆ ಪ್ರಧಾನಿಯವರಿಂದ ಉತ್ತರವೇ ಬರಲಿಲ್ಲ. ಇನ್ನೂ ಕೇಂದ್ರದ ಕಾರ್ಯಕ್ರಮಗಳೆಲ್ಲ ಬೋಗಸ್. ಅದರಿಂದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಚುನಾವಣೆ ಪೂರ್ವದಲ್ಲಿ ನರೇಂದ್ರ ಮೋದಿಯವರು ಘೋಷಿಸಿದ್ದು, ಬಳಿಕ ಜಾರಿಗೆ ತಂದ ಕಾರ್ಯಕ್ರಮಗಳೇನು ? ಯಾವ ಯಾವ ವಿಷಯದಲ್ಲಿ ಅವರು ಯೂ ಟರ್ನ್ ತೆಗೆದುಕೊಂಡರು ಎಂಬುದನ್ನು ನಾವು ಜನರಿಗೆ ವಿವರಿಸುವ ಕೆಲಸ ಮಾಡಬೇಕು ಎಂದರು.

ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಇಲ್ಲಿಗೆ ಬಂದು ನಮ್ಮ ಸರ್ಕಾರವನ್ನು ಪರ್ಸಂಟೇಜ್ ಸರ್ಕಾರ ಎಂದು ಟೀಕಿಸಿದರು. ಆದರೆ ಲೋಕಪಾಲ ಮಸೂದೆ ಕುರಿತು ಈ ವರೆಗೆ ಚಕಾರ ಎತ್ತಿಲ್ಲ. ಒಟ್ಟಾರೆ ಬಿಜೆಪಿ ಸಮಾಜಕ್ಕೆ ಶಾಪ. ಲೋಕಸಭೆ ಚುನಾವಣೆಯಲ್ಲಿ ಆ ಪಕ್ಷವನ್ನು ಸೋಲಿಸುವುದೇ ನಮ್ಮ ಗುರಿಯಾಗಬೇಕು ಎಂದರು.

Related Articles

Comments (0)

Leave a Comment