ಶಿಮ್ಲಾ ಆಸ್ಪತ್ರೆಯಲ್ಲಿ ಮೈಸೂರು ಮೂಲದ ಮಹಿಳೆ: ವಾಪಸ್ ಕರೆತರಲು ಸಿಎಂ ಸೂಚನೆ
- by Suddi Team
- July 23, 2018
- 65 Views
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೈಸೂರು ಮೂಲದ ಮಹಿಳೆಯನ್ನು ರಾಜ್ಯಕ್ಕೆ ವಾಪಸ್ ಕರೆತರಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪತಿಯಿಂದ ಪರಿತ್ಯಕ್ತಳಾಗಿದ್ದ ಈ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿ ತನ್ನ ಅರಿವಿಗೆ ಬಾರದಂತೆ ಹಿಮಾಚಲ ಪ್ರದೇಶ ಸೇರಿದ್ದಳು. ಶಿಮ್ಲಾದ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು.
ಮಾನ್ಯ ಮುಖ್ಯಮಂತ್ರಿಯವರು ಇಂದು ಮೈಸೂರು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಮಹಿಳೆಯನ್ನು ಸುರಕ್ಷಿತವಾಗಿ ಕರೆತಂದು, ಸೂಕ್ತ ಚಿಕಿತ್ಸೆ ಕೊಡಿಸಿ, ಆಶ್ರಯ ಒದಗಿಸಲು ಸೂಚಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿಗಳು ಆ ಮಹಿಳೆಯನ್ನು ರಾಜ್ಯಕ್ಕೆ ವಾಪಸ್ ಕರೆತರಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಹಿಮಾಚಲ ಪ್ರದೇಶದ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಮಹಿಳೆಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದು, ಚಿಕಿತ್ಸೆಯ ನಂತರ ಆಕೆಗೆ ಆಶ್ರಯ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಈ ಮಹಿಳೆ ಪತಿಯಿಂದ ಪರಿತ್ಯಕ್ತಳಾಗಿದ್ದು, ಹಿಮಾಚಲ ಪ್ರದೇಶದ ಕಾಂಗ್ರಾದ ಬೀದಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಕಾಂಗ್ರಾದ ಡಾ. ರಾಜೇಂದ್ರಪ್ರಸಾದ್ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದಾಖಲಿಸಲಾಗಿತ್ತು. ನಂತರ ಜೂನ್ 2016 ರಲ್ಲಿ ಹಿಮಾಚಲ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ಆಸ್ಪತ್ರೆಗೆ ಸ್ಥಳಾಂತರಗೊಳಿಸಲಾಗಿತ್ತು. ಭಾಷೆಯ ಸಮಸ್ಯೆಯಿಂದಾಗಿ ಊರವರೊಂದಿಗೆ ಸಂಪರ್ಕ ಸಾಧಿಸಲು ಅವರಿಗೆ ಆಗಿರಲಿಲ್ಲ ಹಾಗೂ ಆಘಾತಗೊಂಡಿದ್ದರಿಂದ ಅವರು ಅಲ್ಲಿ ಹೇಗೆ ತಲುಪಿದರು ಎಂಬುದನ್ನು ಅವರಿಗೆ ತಿಳಿಸಲು ಸಾಧ್ಯವಾಗಿರಲಿಲ್ಲ.
Related Articles
Thank you for your comment. It is awaiting moderation.
Comments (0)