ಜಯನಗರಕ್ಕಾಗಿ ಟೊಂಕಕಟ್ಟಿ ನಿಂತ ಬಿಜೆಪಿ!

ಬೆಂಗಳೂರು: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣೆ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಎರಡೂ ಕ್ಷೇತ್ರಗಳ ಪೈಕಿ ಈಗಾಗಲೇ ಒಂದು ಕ್ಷೇತ್ರವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಉಳಿದ ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯೇ ಈ ಹಿಂದೆ ಚುನಾಯಿತರಾಗಿದ್ದರು. ಹೇಗಾದರೂ ಈ ಕ್ಷೇತ್ರದಲ್ಲಿ ಮತ್ತೆ ಚುನಾವಣೆ ಗೆಲ್ಲಬೇಕು ಎಂದು ಬಿಜೆಪಿ ನಾಯಕರು ಪಣತೊಟ್ಟು ನಿಂತಿದ್ದಾರೆ.

ಇದೇ 11 ರಂದು ನಡೆಯಲಿರುವ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್ ಪ್ರಹ್ಲಾದ್ ಬಾಬು ಅವರನ್ನು ಗೆಲ್ಲಿಸುವ ಮೂಲಕ ದಿ.ಬಿ.ಎನ್ ವಿಜಯಕುಮಾರ್ ಅವರ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕರೆ ನೀಡಿದ್ದಾರೆ.

ಜಯನಗರದ ಕೃಷ್ಣ ಕನ್ವೆನ್ಷನ್ ಹಾಲ್ ನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಮಟ್ಟದ ಸಮಿತಿ ಸಭೆ ನಡೆಯಿತು.ಬಿ.ಎಲ್ ಸಂತೋಷ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ಎನ್ ಪ್ರಹ್ಲಾದ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಪಿ.ಎನ್ ಸದಾಶಿವ, ಶಾಸಕರು, ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಬೂತ್ ಸದಸ್ಯರು ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಬಿ.ಎಲ್ ಸಂತೋಷ್,ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರವನ್ನು ಸಮರೋಪಾದಿಯಲ್ಲಿ ನಡೆಸಿ ಕ್ಷೇತ್ರವನ್ನು ಮತ್ತೆ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವ ರೀತಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಹಿಂದಿನ ಎರಡು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಎನ್ ವಿಜಯಕುಮಾರ್ ಗೆಲುವು ಸಾಧಿಸಿದ್ದರು. ಆದರೆ, ಅವರ ಅಕಾಲಿಕ ನಿಧನದಿಂದಾಗಿ ಈ ಬಾರಿ ಅವರ ಸಹೋದರ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಅವರನ್ನು ಗೆಲ್ಲಿಸಿಕೊಳ್ಳುವ ಮೂಲಕ ದಿ.ವಿಜಯಕುಮಾರ್ ಅವರ ಕ್ಷೇತ್ರವನ್ನು ಮತ್ತೆ ಪಕ್ಷದ ತೆಕ್ಕೆಗೆ ಸಿಗುವಂತೆ ಮಾಡಬೇಕು ಎಂದರು.

Related Articles

Comments (0)

Leave a Comment