ಶೌಚಾಲಯ ಬಳಕೆ ಕುರಿತು ಜನರ ಮನೋಭಾವ ಬದಲಿಸಿ: ಕೃಷ್ಣ ಬೈರೇಗೌಡ

ಧಾರವಾಡ: ಸ್ವಚ್ಛ ಭಾರತ ಮಿಷನ್ ಅಡಿ ನಿರ್ಮಿಸಲಾಗಿರುವ ಶೌಚಾಲಯಗಳನ್ನು ಬಳಸಲು ಆಂದೋಲನದ ಮಾದರಿಯಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಜಿ‌ಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷ್ಣ ಬೈರೇಗೌಡ, ಶೌಚಾಲಯ ಬಳಕೆ ಕುರಿತು ಸಾರ್ವಜನಿಕರಲ್ಲಿ ಇರುವ ರೂಢಿ, ಮನೋಭಾವಗಳನ್ನು ಬದಲಾಯಿಸಲು ಮುಂದಾಗಬೇಕು. ಶಿಕ್ಷಣ ಹಾಗೂ ಸಂವಹನ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು NRDWP, SDP ಟಾಸ್ಕ್ ಫೋರ್ಸ್ ಮತ್ತಿತರ ಕಾರ್ಯಕ್ರಮಗಳಡಿ ಕೈಗೊಂಡ ಕಾಮಗಾರಿಗಳ ಹಣ ಪಾವತಿಯಲ್ಲಿ ದೀರ್ಘ ಕಾಲೀನ ವಿಳಂಬವಾಗ ಬಾರದು. 2016-17 ರ ಕಾಮಗಾರಿಗಳ ವೆಚ್ಚವು ಮಾರ್ಚ್ 2018 ರವರೆಗೂ ಪಾವತಿಯಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಹೀಗಾಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು‌.

ಶೌಚಾಲಯಗಳನ್ನು ಕಟ್ಟಿದ ಬಳಿಕ ಅವುಗಳ ಬಗ್ಗೆ ಹೆಚ್ಚು ಐಇಸಿ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕು. ಧಾರವಾಡ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ ಅವರ ಸಲಹೆಗಳನ್ನು ಮತ್ತು ಸರ್ಕಾರೇತರ ಅಭಿವೃದ್ಧಿ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಗೆ ಒಂದು ವಿಶೇಷ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಿ. ಎರಡು ಗ್ರಾ.ಪಂ. ಗಳನ್ನು ಸೇರಿಸಿ ಒಂದು ಕ್ಲಸ್ಟರ್ ಮಾಡಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಬೇಕು. ಹಸಿ ಕಸ, ಒಣ ಕಸ ನಿರ್ವಹಣೆ ವಿಲೇವಾರಿ ಸ್ವಚ್ಚತೆ ಬಗೆಗೆ ಜನರ ಅಧಿಕಾರಿಗಳು ಹೊಸ ಪ್ರಯೋಗಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಚುನಾಯಿತ ಪ್ರತಿನಿಧಿಗಳು ನಮ್ಮ ಹಕ್ಕು,ಕರ್ತವ್ಯಗಳನ್ನು ಅರಿತುಕೊಂಡು ಅಧಿಕಾರಿಗಳಿಂದ ಕೆಲಸ ಪಡೆಯಬೇಕು. ಸಂವಿಧಾನ ಹಾಗೂ ಪಂಚಾಯತರಾಜ್ ಕಾಯಿದೆಯಲ್ಲಿ ಎಲ್ಲ ಅಧಿಕಾರ ಮತ್ತು ಜವಾಬ್ದಾರಿಗಳು ವಿವರಿಸಲ್ಪಟ್ಟಿವೆ.

ನರೇಗಾ ಯೋಜನೆಯಡಿಯಲ್ಲಿ ನಾಲಾ ಅಭಿವೃದ್ಧಿ ಸೇರಿಸಿ ಚೆಕ್ ಡ್ಯಾಂ ಗಳನ್ನು ನಿರ್ಮಿಸುವ ವಿಶೇಷ ಪ್ಯಾಕೇಜ್ ತಯಾರಿಸಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಶೇಷ ಗ್ರಾಮ ಸಭೆ ನಡೆಸಿ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಿ. ಮುಂದಿನ ಗ್ರಾಮಸಭೆಯವರೆಗೂ ಕಾಯಬೇಡಿ. ಜಲಸಂರಕ್ಷಣೆಯ ಕಾರ್ಯ ಆದ್ಯತೆಯ ಮೇಲೆ ನಡೆಯಬೇಕು ಎಂದರು. ಈ ವರ್ಷ ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕನಿಷ್ಠ ೧೦೦ ಚೆಕ್ ಡ್ಯಾಂ ಗಳನ್ನಾದರೂ ನಿರ್ಮಿಸಲೇಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಸೂಚಿಸಿದರು.

ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ, ಶಾಸಕರಾದ ಸಿ.ಎಸ್.ಶಿವಳ್ಳಿ, ಸಿ.ಎಂ.ನಿಂಬಣ್ಣವರ್, ಅಮೃತ ದೇಸಾಯಿ, ಜಿ.ಪಂ.ಉಪಾಧ್ಯಕ್ಷ ಶಿವಾನಂದ ಕರಿಗಾರ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಎಲ್.ಕೆ‌.ಅತೀಕ್, ಜಿ.ಪಂ.ಸಿಇಓ ಸ್ನೇಹಲ್ ರಾಯಮಾನೆ ಮತ್ತಿತರರು ಇದ್ದರು.

Related Articles

Comments (0)

Leave a Comment