ಜನತಾದರ್ಶನದ ಉದ್ಯೋಗ ಆಕಾಂಕ್ಷಿಗಳಿಗಾಗಿ ಸಿಎಂ ಉದ್ಯೋಗ ಮೇಳ!

ಬೆಂಗಳೂರು: ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಉದ್ಯೋಗ ಆಕಾಂಕ್ಷಿಗಳಿಗಾಗಿ ಸಿಎಂ ಕುಮಾರಸ್ವಾಮಿ ಉದ್ಯೋಗ ಮೇಳ ಆಯೋಜಿಸಿದ್ದು, ಎರಡು ದಿನಗಳ ಕಾಲ ನಡೆಯುವ ಉದ್ಯೋಗ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.

ಸಿಎಂ ಜನತಾ ದರ್ಶನದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ 3198 ನಿರುದ್ಯೋಗಿಗಳಿಗೆ ಕೆಲಸ ಕೊಡಿಸುವ ಉದ್ದೇಶದಿಂದ ಎರಡು ದಿನಗಳ ಉದ್ಯೋಗ ಮೇಳದಲ್ಲಿ ಹಮ್ಮಿಕೊಳ್ಳಲಾಗಿದ್ದು, 6 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಕೆಲಸ ಕೊಡಿಸುವ ಗುರಿ ಹೊಂದಲಾಗಿದೆ. ಸುಮಾರು 100 ಕ್ಕೂ ಹೆಚ್ಚು ಪ್ರಮುಖ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿವೆ.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದರು. ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿ, ಇದು ಕಾಟಾಚಾರದ ಉದ್ಯೋಗ ಮೇಳ ಅಲ್ಲ, ಯಾರಿಗಾದರೂ ಉದ್ಯೋಗ ಸಿಗಲಿಲ್ಲ ಅಂದರೆ ಮರಳಿ ಯತ್ನ ಮಾಡಿ ಉದ್ಯೋಗ ಸಿಕ್ಕೇಸಿಗುತ್ತದೆ ಎಂದು ಆಕಾಂಕ್ಷಿಗಳಲ್ಲಿ ಭರವಸೆ ಮೂಡಿಸಿದರು.

ರಾಜ್ಯದ ಎಲ್ಲ ಕುಟುಂಬಗಳೂ ನೆಮ್ಮದಿಯ ಬದುಕು ಸಾಗಿಸಬೇಕೆನ್ನುವುದು ನಮ್ಮ ಸರಕಾರದ ಗುರಿ. ಒಂಭತ್ತು ಜಿಲ್ಲೆಗಳಲ್ಲಿ ಒಂಭತ್ತು ಕ್ಲಸ್ಟರ್ ಗಳನ್ನು ರಚಿಸಲು ನಿರ್ಧಾರ ಮಾಡಲಾಗಿದ್ದು, ಒಂದೊಂದು ಜಿಲ್ಲೆಯಲ್ಲಿ ಒಂದು ಲಕ್ಷ ಉದ್ಯೋಗ ಕೊಡುವ ಗುರಿ ಹೊಂದಿದ್ದೇವೆ. ಇದಕ್ಕಾಗಿ ವಿಜನ್ ಗ್ರೂಪ್ ರಚಿಸಿ ಕಾರ್ಯತತ್ಪರವಾಗಿದ್ದೇವೆ ಎಂದು ಹೇಳಿದರು.

ಈ ಸರಕಾರ ಆಗಲೋ ಈಗಲೋ ಬಿದ್ದುಹೋಗುತ್ತೆ ಅಂತ ಟೀಕೆ ಮಾಡ್ತಿದ್ದಾರೆ. ಆದರೆ ನಮ್ಮ ಸರಕಾರ ಸುಭದ್ರವಾಗಿದೆ, ದೂರದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ನಮ್ಮ ಸರಕಾರ ಹಾಕಿಕೊಂಡಿದೆ. ಇಂದಿನಿಂದ ಎರಡು ದಿನ ಬೃಹತ್ ಉದ್ಯೋಗ ಮೇಳ ನಡೆಯಲಿದೆ.

ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ, ಇಡೀ ದೇಶದಲ್ಲಿ ಬಂಡವಾಳ ಹೂಡಿಕೆಯಲ್ಲಿ ನಮ್ಮ ರಾಜ್ಯ ನಂಬರ್ ಒನ್. ಆದರೆ, ಉದ್ಯೋಗ ಸೃಷ್ಟಿಯೇ ದೊಡ್ಡ ಸಮಸ್ಯೆ ಆಗಿದೆ. ಉದ್ಯೋಗ ಇಲ್ಲ ಅಂತಲ್ಲ ಉದ್ಯೋಗ ಇದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯೋಗ ಸೃಷ್ಡಿಗೆ ಮುಂದಾಗಬೇಕು. ಅದರಲ್ಲೂ ಜನತಾ ದರ್ಶನದಲ್ಲಿ ಭಾರಿ ಸಂಖ್ಯೆಯ ಜನ ಉದ್ಯೋಗ ಕೇಳಿಕೊಂಡು ಬರುತ್ತಿದ್ದರು. ಹಾಗಾಗಿಯೇ ಈ ಉದ್ಯೋಗ ಮೇಳವನ್ನು ಆಯೋಜಿಸಲಾಯ್ತು ಎಂದರು.

Related Articles

Comments (0)

Leave a Comment