ಹೊರ ವರ್ತುಲ ರಸ್ತೆ ನಿರ್ಮಾಣ ಭೂಸ್ವಾಧೀನಕ್ಕೆ 4500 ಕೋಟಿ: ಕೃಷ್ಣ ಬೈರೇಗೌಡ

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಹೊರ ವರ್ತುಲ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸಚಿವ ಸಂಪುಟ ಸಭೆಯ ನಂತರ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ ಹಾಗೂ ಹೊಸೂರು ರಸ್ತೆ ಗಳನ್ನು ಸಂಪರ್ಕಿಸುವ 65 ಕಿ.ಮೀ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ ಈ ಹಿಂದೆಯೇ 1810 ಎಕರೆ ಭೂಸ್ವಾಧೀನ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿತ್ತು. ಈ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು 4500 ಕೋಟಿ. ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದರು.

ಸಚಿವ ಸಂಪುಟ ಸಭೆಯ ಇತರ ನಿರ್ಧಾರಗಳು

• ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ 30 ಕೆರೆಗಳಿಗೆ ಕೆ.ಆರ್.ಪುರಂ ಎಸ್‍ಟಿಪಿ ಯಿಂದ ಸಂಸ್ಕರಿಸಿ ತ್ಯಾಜ್ಯ ನೀರನ್ನು ತುಂಬಿಸುವ ಏತ ನೀರಾವರಿ ಯೋಜನೆಗೆ 100 ಕೋಟಿ ರೂ.ಗಳನ್ನು ಒದಗಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

• ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಲು ರೂ. 58 ಕೋಟಿ ಗಳನ್ನು ಒದಗಿಸಲು ಹಾಗೂ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ 16 ಕೋಟಿ ಒದಗಿಸಲು ಅನುಮೋದನೆ ನೀಡಲಾಗಿದೆ.

• ರಾಯಚೂರಿನಲ್ಲಿ ಇಂಡಿಯನ್ ಇನ್ಸ್‍ಟ್ಯೂಟ್ ಆಫ್ ಇನ್‍ಫರ್‍ಮೇಷನ್ ಟೆಕ್ನಾಲಜಿ (IIIT) ಸ್ಥಾಪನೆಗೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ 65 ಎಕರೆ ಭೂಮಿಯನ್ನು ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

• ಕಂದಾಯ ಇಲಾಖೆಯ ಸೇವೆಗಳಲ್ಲಿ ಪಹಣಿ ಪಡೆಯಲು ರೂ. 10 ನಿಗಧಿಪಡಿಸಲಾಗಿತ್ತು. ಇದನ್ನು 15 ರೂ. ಗಳಿಗೆ ಹೆಚ್ಚಿಸಲು ಹಾಗೂ ಇತರೆ ಸೇವೆಗಳಿಗೆ ನಿಗಧಿಪಡಿಸಲಾಗಿದ್ದ 15 ರೂ. ಗಳ ಸೇವೆಯನ್ನು 25 ರೂ. ಗಳಿಗೆ ಹೆಚ್ಚಿಸಲು ಇಂದಿನ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಹಾಗೂ ಅಂಚೆ ಮೂಲಕ ಈ ಸೇವೆಗಳನ್ನು ವಿಸ್ತರಿಸಲು ಸಹ ನಿರ್ಧರಿಸಲಾಗಿದೆ.

• ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 1150 ಹಾಸಿಗೆಗಳ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ 45 ಕೋಟಿ ರೂ. ವೆಚ್ಚವಾಗುತ್ತದೆ. ಇದರಲ್ಲಿ 22.50 ಕೋಟಿಯನ್ನು ರಾಜ್ಯ ಸರ್ಕಾರದಿಂದ ಒದಗಿಸಲು ಹಾಗೂ 22.50 ಕೋಟಿ ರೂ. ಗಳನ್ನು ಜಯದೇವ ಆಸ್ಪತ್ರೆ ಭರಿಸಲು ಉದ್ದೇಶಿಸಿದ್ದು, ಈ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

• ರಾಯಚೂರಿನಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (RIMS) ಆವರಣದಲ್ಲಿ 300 ಹಾಸಿಗೆಗಳ ಸಾಮಥ್ರ್ಯದ ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲು 32 ಕೋಟಿ ರೂ. ಗಳ ಅಂದಾಜು ಪಟ್ಟಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

• ಪಿಪಿಪಿ ಮಾದರಿಯಲ್ಲಿ ರಾಜ್ಯದ 114 ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೌಲಭ್ಯ ಕಲ್ಪಿಸಲಾಗಿದೆ ಇದಲ್ಲದೇ ಇನ್ನೂ 57 ಕಡೆ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಹಾಗೂ ಅವುಗಳ ಖರ್ಚು ಭರಿಸಲು 54.50 ಕೋಟಿ ರೂ. ಗಳನ್ನು ಒದಗಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

• ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ಮತ್ತು ನಂತರದ ವೈದ್ಯೋಪಚಾರ ಬಹಳ ದುಬಾರಿ ಆಗಿರುವುದರಿಂದ ಬಡವರಿಗೆ ತೊಂದರೆ ಆಗುತ್ತಿತ್ತು. ಆದ್ದರಿಂದ ಜೀವ ಸಾರ್ಥಕತೆಯಲ್ಲಿ ನೊಂದಾಯಿಸಿಕೊಂಡ (ಸುವರ್ಣ ಆರೋಗ್ಯ ಟ್ರಸ್ಟ್ ಯೋಜನೆಯಡಿ ಆಯ್ಕೆಯಾದ ಬಡರೋಗಿಗಳಿಗೆ ಸರ್ಕಾರ ನಿಗದಿಪಡಿಸಿದ ದರಗಳಲ್ಲಿ) ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 30 ಕೋಟಿ ರೂ. ಗಳನ್ನು ಬಳಕೆ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

• ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಯನ್ನು ಮಾರ್ಪಡಿಸಿ, ಹೊಸ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಯಲ್ಲಿ ಈವರೆಗೆ ನೆಲಮಹಡಿ ಜೊತೆಗೆ ಮೂರು ಮೇಲ್ಮಹಡಿ ಗಳಿಗೆ ಅನುಮೋದನೆ ನೀಡಲಾಗಿತ್ತು. ಇದನ್ನು ಪರಿಷ್ಕರಿಸಿ ನೆಲಮಹಡಿ ಜೊತೆಗೆ ಹದಿನಾಲ್ಕು ಮೇಲ್ಮಹಡಿ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ ವಸತಿ ಹಂಚಿಕೆಯಾಗುವ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ 1.5 ಲಕ್ಷ ರೂ. ಆರ್ಥಿಕ ನೆರವನ್ನು ಒದಗಿಸಿದರೆ ರಾಜ್ಯ ಸರ್ಕಾರ ಸಾಮಾನ್ಯ ವರ್ಗದವರಿಗೆ 1.2 ಲಕ್ಷ ಹಾಗೂ ಪರಿಶಿಷ್ಟ ಜಾತಿ ವರ್ಗಗಳಿಗೆ 2 ಲಕ್ಷ ನೆರವನ್ನು ಒದಗಿಸುತ್ತದೆ.

• ರಾಮನಗರ ಜಿಲ್ಲೆ ಬೈರಮಂಗಲ ಜಲಾಶಯಕ್ಕೆ ವೃಷಭಾವತಿಯಿಂದ ನೀರು ಹರಿಸಲು ಕಾಲುವೆ ನಿರ್ಮಾಣಕ್ಕೆ 110 ಕೋಟಿ ರೂ.ಗಳ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

• ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಕಲುಷಿತ ನೀರು ಸೇರದಂತೆ ತಡೆಯಲು ಒಳಹರಿವು ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ 285 ಕೋಟಿ 95 ಲಕ್ಷ ರೂ. ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

• ಬಾಲ್ಕಿಯಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ 13 ಕೋಟಿ 20 ಲಕ್ಷ ಹಾಗೂ ಪುತ್ತೂರಿನಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ 25 ಲಕ್ಷ ರೂ.ಗಳ ಕಾಮಗಾರಿಗೆ ಒಪ್ಪಿಗೆ ನೀಡಿದೆ.

• ರಾಮನಗರ, ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರ ವ್ಯಾಪ್ತಿಗೆ ಬರುವ ಹಳ್ಳಿಗೆ ಕಾವೇರಿ ನದಿಯಿಂದ ನೀರು ಸರಬರಾಜು ಮಾಡಲು ಸತ್ಯಗಾಲದಿಂದ ಇಗ್ಗಲೂರು ಬಳಿ ಇರುವ ಹೆಚ್.ಡಿ. ದೇವೇಗೌಡ ಬ್ಯಾರೇಜ್‍ಗೆ ನೀರು ಹರಿಸುವ ಯೋಜನೆಯ ಕಾಮಗಾರಿಗೆ 540 ಕೋಟಿ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

• ಸ್ಮಾರ್ಟ್ ಪೊಲೀಸಿಂಗ್ ಯೋಜನೆಯಡಿ ಸೈಬರ್ ಫೋರೆನಿಕ್ಸ್ ಘಟಕಗಳಿಗೆ ಹಾಗೂ ಟ್ರಾಫಿಕ್ ಪೊಲೀಸರು ಬಳಸುವ ಆಧುನಿಕ ಉಪಕರಣಗಳನ್ನು ಕೊಳ್ಳಲು 32 ಕೋಟಿ 82 ಲಕ್ಷ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

• ಸರ್ಕಾರಿ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

• ಲೋಕಾಯುಕ್ತರ ಮೇಲೆ ಸ್ವತಃ ತನಿಖೆ ನಡೆಸುವ ಸಂದರ್ಭ ಒದಗಿ ಬಂದರೆ ಅದರ ಜವಬ್ದಾರಿಯನ್ನು ಉಪಲೋಕಾಯುಕ್ತರಿಗೆ ವಹಿಸಲು ಅಗತ್ಯ ಕಾನೂನು ತಿದ್ದುಪಡಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

• ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇದುವರೆವಿಗೂ ಅನುಸರಿಸುತ್ತಿದ್ದ ನೇಮಕಾತಿ ನಿಯಮಗಳನ್ನೇ ಮುಂದುವರೆಸಲು ಅಗತ್ಯ ಕಾನೂನು ರೂಪಿಸಲು ಇಂದಿನ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

Related Articles

Comments (0)

Leave a Comment