ಡಾ. ಬಾಬು ಜಗಜೀವನರಾಂ ಅವರ ವ್ಯಕ್ತಿತ್ವ, ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಲು ಸಿಎಂ ಕರೆ

ಬೆಂಗಳೂರು. ಜು.6: ಹಸಿರು ಕ್ರಾಂತಿ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ಅವರ ಆದರ್ಶ, ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿದ್ದು, ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆ ನೀಡಿದರು.

ವಿಧಾನಸೌಧದ ಆವರಣದಲ್ಲಿಂದು ಡಾ. ಬಾಬುಜಗಜೀವನರಾಂ ಅವರ ಪುಣ್ಯಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದ ನಂತರ ಮಾತನಾಡಿದ ಅವರು, ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾನ್ ನಾಯಕರಾದ ಡಾ. ಬಾಬುಜಗಜೀವನರಾಂ ಅವರು ಶೋಷಿತರ ಆಶಾಕಿರಣರಾಗಿದ್ದಾರೆ. ನಾಲ್ಕು ದಶಕಗಳ ಕಾಲ ಸಂಸತ್ ಸದಸ್ಯರಾಗಿ ಅಪರಿಮಿತವಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ, ರಾಷ್ಟ್ರದ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಸ್ವಾತಂತ್ರೋತ್ತರ ಭಾರತದಲ್ಲಿ ಆಹಾರ ಕೊರತೆ ಎದುರಾದಾಗ ಸುಧಾರಿತ ಬಿತ್ತನೆ ಬೀಜ ಹಾಗೂ ಸುಧಾರಿತ ತಳಿಗಳನ್ನು ಅಳವಡಿಸಿಕೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ, ಹಸಿರುಕ್ರಾಂತಿಯ ಹರಿಕಾರ ಎಂದೇ ಖ್ಯಾತಿಯಾಗಿದ್ದಾರೆ. ರಕ್ಷಣಾ ಸಚಿವರಾಗಿ ಗುರುತರವಾಗಿ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರದ ಬೆನ್ನೆಲುಬು ರೈತ ಹಾಗೂ ಯೋಧ ಈ ಎರಡೂ ಸಮುದಾಯಕ್ಕೆ ಡಾ. ಬಾಬು ಜಗಜೀವನ ರಾಂ ಅವರ ಮಾರ್ಗದರ್ಶನ ಹಾಗೂ ನಾಯಕತ್ವ ಉಲ್ಲೇಖನಾರ್ಹವಾಗಿದೆ. ಅವರ ಸಾಮಾಜಿಕ ಕಳಾಕಳಿ ಹಾಗೂ ರಾಜಕೀಯ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಗೃಹಸಚಿಚ ಬಸವರಾಜ ಬೊಮ್ಮಾಯಿ, ಸಂಸದ ನಾರಾಯಣಸ್ವಾಮಿ, ಮಾಜಿ ಸಚಿವ ಆಂಜನೇಯ ಅವರು ಮಾಲಾರ್ಪಣೆ ಸಲ್ಲಿಸಿದರು.

 

Related Articles

Comments (0)

Leave a Comment