ಗ್ರೇಟರ್ ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
- by Suddi Team
- May 18, 2025
- 183 Views
ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ! ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು! ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ನಾಡು ಎಂದರೆ ಕಲ್ಲು ಬಂಡೆಗಳಲ್ಲ,ನಾಡು ಎಂದರೆ ಮನುಷ್ಯರು ಎಂದು ನಗರದ ಉಸ್ತುವಾರಿ ಹೊಂದಿರುವವರ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದಿದ್ದಾರೆ.
ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ? ಕೆರೆ ನೀರಿಗೆ ಕಮೀಷನ್ ಕೋಡಿ ಬಿದ್ದಿದೆ! ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆ. ಏಕೆ? ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ? ನಗರ ಜನರ ಬೆವರಿನ ಹಣ ಏನೇನಾಗುತ್ತಿದೆ?ಕಲೆಕ್ಷನ್ ಎಷ್ಟು? ವೆಚ್ಚ ಎಷ್ಟು? ಸ್ವಾಹಾ ಎಷ್ಟು? ಎಂದು ಅವರು ಪ್ರಶ್ನಿಸಿದ್ದಾರೆ.
ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ!! ಹೊಸ ಶೀಶೆ, ಹಳೇ ಮದ್ಯ.ಹಳೇ ಕಾಮಗಾರಿ, ಹೊಸ ಹೊಸ ಬಿಲ್ಲು! ಗ್ರೇಟರ್ ಬೆಂಗಳೂರು ಅಲ್ಲ,ಲೂಟರ್’ಗಳ ಬೆಂಗಳೂರು! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Articles
Thank you for your comment. It is awaiting moderation.


Comments (0)