ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ ನೀಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
- by Suddi Team
- May 30, 2025
- 12 Views

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ,ಈ ಸಂಬಂಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶುಕ್ರವಾರ ನಗರದ ಸಕ್ಯೂ೯ಟ್ ಹೌಸ್ ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಠಿ ನಿರ್ವಹಣೆ ಕುರಿತು ಸಭೆ ನಡೆಸಿದರು. ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ, ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.
ಇದಕ್ಕೂ ಮೊದಲು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಚಿವರು ಪರಿಶೀಲನೆ ನಡೆಸಿದರು. ಭಾರೀ ಮಳೆಗೆ ಗುಡ್ಡ ಕುಸಿತದಿಂದ ನಾಲ್ವರು ಮೃತಪಟ್ಟಿದ್ದು, ಮೃತರ ಕುಟುಂಬವರ್ಗದವರಿಗೆ ಸಚಿವರು ಸಾಂತ್ವಾನ ಹೇಳಿದರು. ಕಾಂತಪ್ಪ ಪೂಜಾರಿಯ ಮನೆಯಲ್ಲಿ ಮೂವರು ಹಾಗೂ ನೌಶಾದ್ರ ಮನೆಯಲ್ಲಿ ಒಬ್ಬ ಬಾಲಕಿ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದರು.
ನಗರದ ಪಂಪ್ ವೆಲ್, ಕೊಟ್ಟಾರಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರವು ಸೂಕ್ತ ತಂತ್ರಜ್ಞಾನವನ್ನು ಅನ್ವಯಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.
ವಿದ್ಯುತ್ ಸಮಸ್ಯೆಗಳ ಬಗ್ಗೆ ಸಾರ್ವಜನಿಕ ದೂರುಗಳಿಗೆ ಮೆಸ್ಕಾಂ ತಕ್ಷಣವೇ ಸ್ಪಂದಿಸಬೇಕು. ಮೆಸ್ಕಾಂ ಶಾಖಾ ಜೆಇ/ ಎಇಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಎಚ್ಚರಿಸಿದರು.
Related Articles
Thank you for your comment. It is awaiting moderation.
Comments (0)