ಸರ್ಕಾರಿ ಸವಲತ್ತು ಪಡೆದು ರೈತರು ಆರ್ಥಿಕವಾಗಿ ಬಲಿಷ್ಠರಾಗಬೇಕು: ಸಚಿವ ಎನ್. ಚಲವರಾಯ ಸ್ವಾಮಿ
- by Suddi Team
- June 17, 2025
- 71 Views

ಉತ್ತರ ಕನ್ನಡ: ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದ್ದು, ಭೂಮಿಯನ್ನು ನಂಬಿ ಸರ್ಕಾರದ ಸವಲತ್ತು ಪಡೆದುಕೊಂಡು ಎಲ್ಲ ರೈತರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂದು ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಕರೆ ನೀಡಿದರು.
ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು, 1,000 ಅಧಿಕಾರಿ, ಸಿಬ್ಬಂದಿ ನೇಮಕಾತಿಗೆ ಸೂಚನೆ ನೀಡಲಾಗಿದೆ. ಸದ್ಯದಲ್ಲೇ ನೋಟಿಫಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24 ಸಾವಿರ ಕೃಷಿ ಹೊಂಡ ನಿರ್ಮಿಸುವ ಗುರಿ ಹೊಂದಲಾಗಿದೆ. ಕಳೆದ 2 ವರ್ಷದಲ್ಲಿ ರೈತರಿಗೆ 344 ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಕಬ್ಬು ಕಟಾವು ಯಂತ್ರಗಳ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 50 ಲಕ್ಷ ಹಾಗೂ ಸಾಮಾನ್ಯ ವರ್ಗದ ರೈತರಿಗೆ 40 ಲಕ್ಷ ಸಬ್ಸಿಡಿ ನೀಡಲಾಗುತ್ತಿದೆ. ಸ್ಪ್ರಿಂಕ್ಲರ್ಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಎಲ್ಲ ರೈತರು ಪಡೆಯಬೇಕು ಎಂದರು.
ಸಮಗ್ರ ಕೃಷಿ ಮಾಡುವ ಅನೇಕ ರೈತರು ಆರ್ಥಿಕವಾಗಿ ಬಲಿಷ್ಠರಾಗಿದ್ದಾರೆ. ಭೂಮಿಯನ್ನು ನಂಬಿ ಸರ್ಕಾರದ ಸವಲತ್ತು ಪಡೆದುಕೊಂಡು ಎಲ್ಲಾ ರೈತರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂದು ಕರೆ ನೀಡಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತರಲಾದ 5 ಗ್ಯಾರಂಟಿ ಯೋಜನೆಗಳಿಂದ ಜನರ ಬದುಕನ್ನು ಹಸನು ಮಾಡಲಾಗಿದೆ. ವರ್ಷಕ್ಕೆ 50 ಸಾವಿರ ಕೋಟಿಯಂತೆ 5 ವರ್ಷಕ್ಕೆ 250 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ. ಇದರ, ಜತೆಗೆ ರಾಜ್ಯದಲ್ಲಿ ಇತರ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.
ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಮಾತನಾಡಿ, ರೈತರು ತಮಗೆ ವಿತರಿಸಿರುವ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಆರ್ಥಿಕ ಸುಧಾರಣೆಯ ಜತೆಗೆ ಕೃಷಿ ಉತ್ಪನ್ನಗಳನ್ನು ಹೆಚ್ಚು ಮಾಡಿಕೊಳ್ಳಬೇಕು. ಭತ್ತ, ಜೋಳದ ಬೆಳೆಗಳ ಇಳುವರಿ ಕಡಿಮೆಯಾದಂತೆ ಇಲ್ಲಿನ ರೈತರು ಕಬ್ಬು ಬೆಳೆಯಲು ಪ್ರಾರಂಭಿಸಿದರು. ಇದರಿಂದಾಗಿ, ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ತೆರೆಯಲಾಯಿತು. ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಪಡೆದು ರೈತರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾದರೆ ದೇಶದ ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಬೆಳೆ ಸಮೀಕ್ಷೆ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಕೃಷಿ ಇಲಾಖೆ ಆಯುಕ್ತ ವೈ ಎಸ್. ಪಾಟೀಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ ಪುತ್ರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಹಳಿಯಾಳ ಪುರಸಭೆ ಅಧ್ಯಕ್ಷೆ ಪಾರ್ವತಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವ್ಕರ್ ಮತ್ತಿತರು ಇದ್ದರು.
Related Articles
Thank you for your comment. It is awaiting moderation.
Comments (0)