ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸದಿದ್ರೆ ಬದಲಾವಣೆ ಅನಿವಾರ್ಯ; ಎಎಜಿಗಳಿಗೆ ಸಿಎಂ ವಾರ್ನಿಂಗ್

ಬೆಂಗಳೂರು: “ನಿಮ್ಮ ತಪ್ಪುಗಳಿಂದ ನಮಗೆ ಮುಜುಗರವುಂಟಾಗುವ ಪರಿಸ್ಥಿತಿ ಬರಬಾರದು. ನೀವೆಲ್ಲರೂ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ, ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ” ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಿಗೆ (ಎಎಜಿ) ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌, ಸಿಎಂ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಭಾಗಿಯಾಗಿದ್ದ ಎಎಜಿ ಕಾರ್ಯನಿರ್ವಹಣಾ ಸಭೆಯ ನೇತೃತ್ವ ವಹಿಸಿದ್ದ ಮುಖ್ಯಮಂತ್ರಿಗಳು, ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳಿಗೆ ಹಲವು ಸಲಹೆ-ಸೂಚನೆ‌ಗಳ ಜತೆಗೆ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದರು.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನ್ಯಾಯಾಲಯಗಳಲ್ಲಿ ಸರ್ಕಾರದ ಪರ ವಕೀಲರು ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ಹಲವು ಪ್ರಕರಣಗಳಲ್ಲಿ ನಾವು ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಆದೇಶಗಳು ನಮ್ಮ ವಿರುದ್ಧವಾಗಿ ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಕೋಮುವಾದ, ದ್ವೇಷ ಭಾಷಣ ಮುಂತಾದ ಪ್ರಕರಣಗಳಲ್ಲಿ ಪೊಲೀಸ್ ಎಫ್ಐಆರ್ ದಾಖಲಾದ ನಂತರ ಕೂಡ ಸುಲಭವಾಗಿ ತಡೆಯಾಜ್ಞೆ ದೊರೆಯುತ್ತದೆ. ತಡೆಯಾಜ್ಞೆಯನ್ನು ವರ್ಷಗಟ್ಟಲೆ ತೆರವುಗೊಳಿಸದೆ ಇಡುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿ ಸಹ ಸರ್ಕಾರಕ್ಕೆ ಮುಜುಗುರವಾಗುವಂತಹ ಬೆಳವಣಿಗೆಗಳು ಆಗಿವೆ. ಸಂಪೂರ್ಣ ಸಿದ್ಧತೆಯೊಂದಿಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬೇಕು. ಮೆರಿಟ್‌ ಇರುವ ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಲು ಅವಕಾಶ ನೀಡಬಾರದು ಎಂದು ಕಿವಿಮಾತು ಹೇಳಿದರು.

ಪ್ರತಿಯೊಂದು ಪ್ರಕರಣವನ್ನೂ ಸವಾಲಿನಿಂದ ಸ್ವೀಕರಿಸಿ, ಕಾರ್ಯ ನಿರ್ವಹಿಸಿದರೆ ಸರ್ಕಾರಕ್ಕೆ ಉತ್ತಮ ಹೆಸರು ಬರಲು ಸಾಧ್ಯವಿದೆ. ನಿಮ್ಮಿಂದ ಹೆಚ್ಚಿನ ಕ್ರಿಯಾಶೀಲ ಕಾರ್ಯನಿರ್ವಹಣೆಯನ್ನು ಸರ್ಕಾರ ಅಪೇಕ್ಷಿಸುತ್ತದೆ. ಇಲಾಖೆಗಳಿಂದ ಅಥವಾ ಅಧಿಕಾರಿಗಳಿಂದ ಸರಿಯಾಗಿ ಸ್ಪಂದನೆ ದೊರೆಯದಿದ್ದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದರು.

ಎಲ್ಲ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳಿಗೆ ಇಲಾಖಾವಾರು ಕಾರ್ಯಕ್ಷೇತ್ರವನ್ನು ನಿಗದಿಪಡಿಸಬೇಕು. ನ್ಯಾಯಾಂಗದಲ್ಲಿನ ಎಲ್ಲ ಅಡ್ಡಿಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ. ರಾಜ್ಯ ಸರ್ಕಾರದ ಪರವಾದ ನ್ಯಾಯಾಂಗ ಹೋರಾಟಗಳನ್ನು ಇನ್ನಷ್ಟು ವೃತ್ತಿಪರಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ರಾಜ್ಯ ಸರ್ಕಾರದ 21,799 ಪ್ರಕರಣಗಳು ಹೈಕೋರ್ಟ್‌ನಲ್ಲಿ ಬಾಕಿಯಿವೆ. ಇದರಲ್ಲಿ 5,016 ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಇವುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯ ಕಾರ್ಯದರ್ಶಿಯವರು ಎಲ್ಲ ಹೆಚ್ಚುವರಿ ಅಡ್ವೊಕೇಟ್ ಜನರಲ್‌ ಅವರ ಸಭೆ ಕರೆದು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವುದು ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Related Articles

Comments (0)

Leave a Comment