ಒಳಮೀಸಲಾತಿಯಲ್ಲಿ ಯಾರಿಗೂ ಅನ್ಯಾಯವಾಗಲ್ಲ: ಸಚಿವ ಶಿವರಾಜ್ ತಂಗಡಗಿ ಭರವಸೆ
- by Suddi Team
- August 10, 2025
- 129 Views

ಬೆಂಗಳೂರು: ಒಳ ಮೀಸಲಾತಿ ವಿಚಾರವಾಗಿ ಯಾವ ಸಮುದಾಯದವರು ಕೂಡ ಆತಂಕಪಡುವ ಅಗತ್ಯವಿಲ್ಲ,ನಮ್ಮ ಮುಖ್ಯಮಂತ್ರಿಗಳು ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನುಲಿಯ ಚಂದಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು,ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ಸಲ್ಲಿಸಿರುವ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದೆ ಹಾಗಾಗಿ ಯಾವ ಸಮುದಾಯವೂ ಆತಂಕಗೊಳ್ಳಬಾರದು, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಎಲ್ಲ ಸಮುದಾಯಗಳಿಗೂ ನ್ಯಾಯ ಕೊಡಿಸಲಿದ್ದಾರೆ ಎಂದು ಭರವಸೆ ನೀಡಿದರು.
ಕಳೆದ ವರ್ಷದ ಜಯಂತಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊರಮ – ಕೊರಚ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ 100*200 ಅಳತೆಯ ನಿವೇಶನವನ್ನು ಉಚಿತವಾಗಿ ನೀಡುವ ಭರವಸೆ ನೀಡಿದ್ದರು. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಮತ್ತೊಮ್ಮೆ ತಂದು ಭರವಸೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಭೋವಿ, ಕೊರಮ, ಕೊರಚ ಹಾಗೂ ಲಂಬಾಣಿ ಸಮುದಾಯಗಳೊಂದಿಗೆಯೇ ನಾನಿದ್ದೇನೆ. ನಾವು ಒಂದೇ ತಕ್ಕಡಿಯಲ್ಲಿದ್ದೇವೆ. ಒಳ ಮೀಸಲಾತಿ ವಿಚಾರವಾಗಿ ಯಾವ ಸಮುದಾಯದವರು ಕೂಡ ಆತಂಕಪಡುವ ಅಗತ್ಯವಿಲ್ಲ ನಿಮ್ಮ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಸಮುದಾಯ ಸಂಘಟನೆಯಾಗಿ ಸರ್ಕಾರಕ್ಕೆ ತಮ್ಮ ಮನವಿಯನ್ನು ಸಲ್ಲಿಸಬೇಕು. ನಿಮ್ಮ ಸಮುದಾಯ ಸಂಘಟನೆ ಆಗದಿದ್ದಲ್ಲಿ, ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕಿವಿ ಮಾತು ಹೇಳಿದರು.
ಬಾಗಲಕೋಟೆ ಜಿಲ್ಲೆಯಲ್ಲಿರುವ ಖ್ಯಾತ ಶೆಹನಾಯಿ ವಾದಕ ಸನಾದಿ ಅಪ್ಪಣ್ಣ ಅವರ ಸಮಾಧಿಯನ್ನು ಅಭಿವೃದ್ಧಿಪಡಿಸಿ, ಪ್ರವಾಸಿ ತಾಣವಾಗಿಸಲು ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಬಾಗಲಕೋಟೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದು, ಮರು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ನಮ್ಮ ಸರ್ಕಾರ ತುಳಿತಕ್ಕೆ ಒಳಗಾದ ಸಮುದಾಯದವರ ಪರ ಇದೆ. ನಾನು ಇಲಾಖೆ ಸಚಿವನಾದ ಬಳಿಕ ಬಸವರಾಜ್ ಭಜಂತ್ರಿ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ, ನಿಂಗಪ್ಪ ಭಜಂತ್ರಿ ಅವರಿಗೆ ಜಾನಪದ ಪ್ರಶಸ್ತಿ ಹಾಗೂ ಬಾಗಲಕೋಟೆಯ ಬಸಪ್ಪ ಭಜಂತ್ರಿ ಅವರಿಗೆ ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ ಎಂದು ವಿವರಿಸಿದರು.
ಇನ್ನು ನೂಲಿಯ ಚಂದಯ್ಯ ಅವರು ಒಬ್ಬ ಕಾಯಕಯೋಗಿ. ಅವರು ಬಾಳಿದ ಬಾಳು, ಬೋಧಿಸಿದ ನೀತಿ, ರಚಿಸಿದ ವಚನಗಳು ಸರ್ವಕಾಲಕ್ಕೂ ಸರ್ವಸ್ಥಳಕ್ಕೂ ಸಲುವಂತಹದು. ಕಾಯಕ ಹಾಗೂ ದಾಸೋಹದ ತತ್ವವನ್ನು ನುಲಿಯ ಚಂದಯ್ಯ ಪ್ರತಿಪಾದಿಸಿದ್ದರು. ನಾವು ಅವರ ತತ್ವ ಚಿಂತನೆಗಳನ್ನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಸಲಹೆ ನೀಡಿದರು.
Related Articles
Thank you for your comment. It is awaiting moderation.
Comments (0)