ರಾಜಕೀಯ ಪ್ರೇರಿತ ಪ್ರಕರಣಗಳನ್ನು ಕಾನೂನು, ರಾಜಕೀಯ ಮುಖಾಂತರ ಎದುರಿಸುತ್ತೇವೆ; ರವಿಕುಮಾರ್

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಪೋಲೀಸರ ಮುಖಾಂತರ, ರಾಜಕೀಯ ಪ್ರೇರಿತವಾಗಿ ನಮ್ಮ ಮೇಲೆ ಪ್ರಕರಣಗಳನ್ನು ದಾಖಲಿಸಿದ್ದು ಇದರ ವಿರುದ್ದ ಪಕ್ಷವು ಕಾನೂನು ಹಾಗೂ ರಾಜಕೀಯ ಮುಖಾಂತರ ಹೋರಾಟ ನಡೆಸಲಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸಲು ಮುಂದಾಗುತ್ತಿರುವುದು ಖಂಡನೀಯ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮತ್ತು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರ ವಿರುದ್ಧ ರಾಜಕೀಯ ಪ್ರೇರಿತವಾಗಿ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ ಎಂದು ಕಿಡಿಕಾರಿದ್ದಾರೆ.

“ ಈ ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದಾದ್ರೂ ನೆಪ ಹಿಡಿದು ವಿರೋಧ ಪಕ್ಷಗಳ ನಾಯಕರನ್ನು, ಕಾರ್ಯಕರ್ತರನ್ನು ಬೆದರಿಸಿ, ಸುಳ್ಳು ಪ್ರಕರಣ ದಾಖಲಿಸುತ್ತಿದೆ. ಪ್ರಕರಣಕ್ಕೂ, ಅವರಿಗೂ ಸಂಬಂಧವಿಲ್ಲದ ದೂರುಗಳು ಹಾಗೂ ಅಸಂಬದ್ಧ ವಿಷಯವನ್ನು ಆಧರಿಸಿ ಇಬ್ಬರು ಬಿಜೆಪಿ ನಾಯಕರ ವಿರುದ್ಧ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವ ಅಗತ್ಯವೇ ಇರಲಿಲ್ಲ. ಆದರೆ, ಈ ಕಾಂಗ್ರೇಸ್ ರಾಜಕೀಯ ಮಾಡಿದೆ. ಈ ಕಾಂಗ್ರೇಸ್ ಸರ್ಕಾರದ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಹೆದರುವುದಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಅಂದು 1975 ರಲ್ಲಿ ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ವಿರುದ್ಧ ನಮ್ಮ ಪಕ್ಷ ಹೋರಾಡಿ ಜಯಶಾಲಿ ಗಳಾಗಿದ್ದೇವೆ. ಈ ಸಿದ್ದರಾಮಯ್ಯ ಸರ್ಕಾರ ಯಾವ ಲೆಕ್ಕ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಪಕ್ಷವು ತಕ್ಕ ಪಾಠ ಕಲಿಸಲಿದೆ ಎಂದಿದ್ದಾರೆ.

Related Articles

Comments (0)

Leave a Comment