ಸರ್ಕಾರಿ ಬಸ್,ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧ: ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ಜಾಹೀರಾತುಗಳನ್ನು ಪ್ರಚಾರ ಮಾಡದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿರುವ ನಾಲ್ಕು ನಿಗಮಗಳ ಸಾರಿಗೆ ಬಸ್ಸು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತನ್ನು ನಿರ್ಬಂಧಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ/ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ / ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡುವಂತೆ ನಿರ್ದೇಶನ ನೀಡಿದ್ದಾರೆ.

Related Articles

Comments (0)

Leave a Comment