ಕಮಲ್ ಹಾಸನ್ ವಿಚಾರದಲ್ಲಿ  ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ:ನಟ ಕಮಲ್ ಹಾಸನ್ ಅವರ ಹೇಳಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಆದರೆ ಸಿನಿಮಾ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರು ಕನ್ನಡಿಗರೇ ಏನಾಗಲಿದೆ ಎಂದು ಕಾದು ನೋಡೋಣ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಹೇಳಿದರು.

ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡದ ಸ್ವಾಭಿಮಾನದ ವಿಚಾರ ಬಂದಾಗ ಕನ್ನಡದ ಚಿತ್ರಮಂದಿರದ ಮಾಲೀಕರು ಅವರ ಚಿತ್ರಗಳಿಗೆ ಅವಕಾಶ ಕೊಡುವುದಿಲ್ಲ ಎಂದು ಭಾವಿಸಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಕನ್ನಡದ ಭಾಷೆ, ನೆಲ ಹಾಗೂ ಜಲದ ವಿಚಾರದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಇರುತ್ತೇವೆ. ನಮ್ಮ ಚಿತ್ರಮಂದಿರದ ಮಾಲೀಕರು ಹಾಗೂ ಸಿನಿಮಾ ವಿತರಕರು ಏನು ಮಾಡುತ್ತಾರೆ ಎಂಬುದರ ಬಗ್ಗೆ ಚರ್ಚೆ ಮಾಡುತ್ತೇನೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ಕೇಂದ್ರದ ಕೈ ಗೊಂಬೆಯಾಗಿ ಇಡಿ ವರ್ತನೆ: ಇಡಿಯವರು ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಸಮನ್ಸ್ ನೀಡಿದ್ದಾರೆ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಇಡಿಯವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ  ವರ್ತಿಸುತ್ತಿದ್ದಾರೆ. ಇಂತಹ ಎಷ್ಟೇ ಸಮನ್ಸ್  ನೀಡಿದರೂ ಅದಕ್ಕೆ ಉತ್ತರ ನೀಡುವ ಶಕ್ತಿ ನಮಗಿದೆ ಎಂದು ಹೇಳಿದರು.

ಇಡಿ ಅಧಿಕಾರಿಗಳಿಗೆ ಬಿಜೆಪಿಯವರು ಕಣ್ಣಿಗೆ ಕಾಣುವುದೇ ಇಲ್ಲ. ಇದು ರಾಜ್ಯದ ಜನರಿಗೆ ಗೊತ್ತಾಗುತ್ತಿದೆ. ಇಡಿ ಇರುವುದು ಕೇವಲ ಕಾಂಗ್ರೆಸ್ ಅವರ ಮೇಲೆ ದಾಳಿ ಮಾಡಲು ಅಷ್ಟೇನಾ? ಬಿಜೆಪಿಯವರಿಗೂ ಇಡಿಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Related Articles

Comments (0)

Leave a Comment