ದೇವಸ್ಥಾನದ ನಿರ್ವಹಣೆಯನ್ನು ಧರ್ಮಸ್ಥಳ ನೋಡಿ ಕಲಿಯಿರಿ: ಪುರಿ ಆಡಳಿತ ಮಂಡಳಿಗೆ ಸುಪ್ರೀಂ ಚಾಟಿ

 

ನವದೆಹಲಿ: ದೇವಸ್ಥಾನ ನಿರ್ವಹಣೆಯನ್ನು ಯಾವ ರೀತಿ ಮಾಡಬೇಕು ಎಂದು ಧರ್ಮಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜಗನ್ನಾಥ ದೇವಸ್ಥಾನದ ಆಡಳಿತ ಮಂಡಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ದೇವಸ್ಥಾನದಲ್ಲಿ ದೇವಾಳದ ಸಿಬ್ಬಂದಿಯಿಂದ ಭಕ್ತರ ಮೇಲೆ ಆಗುತ್ತಿರುವ ಶೋಷಣೆಯ ವಿರುದ್ಧವಾಗಿ ಮೃಣಾಲಿನಿ ಪಧಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ ಆದರ್ಶ ಗೋಯಲ್ ಮತ್ತು ನ್ಯಾ ಅಶೋಕ್ ಭೂಷಣ್ ಅವರಿದ್ದ ಪೀಠ ದೇವಸ್ಥಾನದ ಆಡಳಿತ ಮಂಡಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ.

ಕರ್ನಾಟಕದ ಧರ್ಮಸ್ಥಳ ದೇವಸ್ಥಾನ, ಜಮ್ಮು ಮತ್ತು ಕಾಶ್ಮೀರದ ವೈಷ್ಣವ ದೇವಿ, ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದ ನಿರ್ವಹಣೆ ವ್ಯವಸ್ಥೆಯನ್ನು ಅಧ್ಯಯನ ನಡೆಸುವಂತೆ ಒಡಿಶಾ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿದೆ.

ಲಕ್ಷಾಂತರ ಭಕ್ತರು ಪ್ರತಿ ವರ್ಷ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪ್ರಾರ್ಥನೆ ಸಲ್ಲಿಸಿ ದಾನವನ್ನು ಅರ್ಪಣೆ ಮಾಡುತ್ತಾರೆ. ಹಾಗಾಗಿ ಭಕ್ತರ ಸೇವಾದರ್ಶನಕ್ಕೆ ಮುಕ್ತ ಅವಕಾಶ ಮಾಡಿಕೊಡುವುದು ಹಾಗೂ ದೇವಸ್ಥಾನದ ವಾತಾವರಣವನ್ನು ಸರಿಯಾಗಿ ಇಟ್ಟುಕೊಳ್ಳುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ ಎಂದು ಪೀಠ ತಿಳಿಸಿದೆ.

ದೇವಸ್ಥಾನದಲ್ಲಿ ಭಕ್ತರು ಎದುರಿಸುತ್ತಿರುವ ಸಮಸ್ಯೆಗಳು, ಶೋಷಣೆಗಳು ಹಾಗೂ ಆಡಳಿತ ಮಂಡಳಿಯಲ್ಲಿರುವ ನ್ಯೂನತೆಗಳನ್ನು ಜೂನ್ 30 ರೊಳಗೆ ಮಧ್ಯಂತರ ವರದಿ ಮಾಡುವಂತೆ ಪೂರಿ ಜಿಲ್ಲಾ ನ್ಯಾಯಾಧೀಶರಿಗೆ ಪೀಠ ಆದೇಶಿಸಿದೆ.

Related Articles

Comments (0)

Leave a Comment