ದೆಹಲಿ ಭೇಟಿ ಯಶಸ್ವಿ: ಸಿಎಂ ಕುಮಾರಸ್ವಾಮಿ
- by Suddi Team
- July 18, 2018
- 27 Views

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಸಚಿವರೊಂದಿಗೆ ನಡೆಸಿದ ಮಾತುಕತೆಯ ಫಲವಾಗಿ ಸುಮಾರು 2500 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಅನುದಾನವನ್ನು ಪಡೆದುಕೊಳ್ಳುವಲ್ಲಿ ಮತ್ತು ವಿವಿಧ ಯೋಜನೆಗಳಿಗೆ ಅನುಮತಿ ದೊರಕಿಸಿಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿಯು ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.
ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಚರ್ಚಿಸುವ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ಈ ವೇಳೆಯಲ್ಲಿ ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕರ ಸರಬರಾಜು ಸಚಿವರು, ಭೂ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವರು, ಕೃಷಿ ಸಚಿವರು, ರೈಲ್ವೆ ಮತ್ತು ಕಲ್ಲಿದ್ದಲು ಸಚಿವರು ಸೇರಿದಂತೆ ರಕ್ಷಣಾ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ಚರ್ಚಿಸಿದ್ದರು.
ತಮ್ಮ ಭೇಟಿಯ ವೇಳೆ ರಾಜ್ಯದ ಕೋರಿಕೆಗಳಿಗೆ ಎಲ್ಲಾ ಸಚಿವರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸಂತೋಷ ತಂದಿದೆ. ಹಾಗೆಯೇ, ಸಚಿವರೊಂದಿಗೆ ನಡೆಸಿದ ಮಾತುಕತೆಯೂ ಫಲಪ್ರದವಾಗಿತ್ತು. ಇದಕ್ಕಾಗಿ ಸಹಕಾರ ನೀಡಿದ ಎಲ್ಲಾ ಸಚಿವರನ್ನು ರಾಜ್ಯದ ಪರವಾಗಿ ಅಭಿನಂದಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾದ ರಾಮ್ ವಿಲಾಸ್ ಪಾಸ್ವಾನ್ ಅವರೊಂದಿಗೆ ಚರ್ಚಿಸಿದ ವೇಳೆ 2014 ರಿಂದ ಇಂದಿನವರೆಗೆ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಬೆಂಬಲ ಬೆಲೆಯ ಬಾಕಿ ಮೊತ್ತ 954 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ 85 ಲಕ್ಷ ಲೀಟರ್ಗಳಷ್ಟು ಹಾಲು ಉತ್ಪಾದನೆಯಾಗುತ್ತಿದ್ದು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿರುವ ಜಿಲ್ಲಾ ಹಾಲು ಉತ್ಪಾದಕರ ಸಂಘಗಳಲ್ಲಿ ಮೆಗಾ ಡೈರಿಗಳನ್ನು ಸ್ಥಾಪಿಸಬೇಕೆನ್ನುವ ರಾಜ್ಯದ ಉದ್ದೇಶವನ್ನು ಮೆಚ್ಚಿಕೊಂಡ ಕೃಷಿ ಸಚಿವರಾದ ರಾಧಾ ಮೋಹನ್ ಸಿಂಗ್ ಅವರು ಇದಕ್ಕಾಗಿ 900 ಕೋಟಿ ರೂ.ಗಳ ಅನುದಾನ ಬಿಡುಗಡೆಗೆ ಸಮ್ಮತಿ ಸೂಚಿಸಿದ್ದಾರೆ. ಈ ಅನುದಾನದಲ್ಲಿ ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೆಗಾ ಡೈರಿಗಳನ್ನು ಸ್ಥಾಪಿಸಲಾಗುವುದು ಎಂದು ಕುಮಾರಸ್ವಾಮಿಯವರು ತಿಳಿಸಿದರು.
ರಾಜ್ಯದಲ್ಲಿ ಮಾರುಕಟ್ಟೆಗಳನ್ನು ಉನ್ನತೀಕರಿಸಲು ಅಗತ್ಯವಿರುವ ಅನುದಾನ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಣ್ಣು ಪರೀಕ್ಷಾ ಕೇಂದ್ರಗಳ ಸ್ಥಾಪನೆ, ಆವರ್ತ ನಿಧಿ, ಬೆಂಬಲ ಬೆಲೆ ಹಾಗೂ ಅಡಿಕೆ ಮತ್ತು ತೆಂಗು ಬೆಳೆಗಾರರ ರಕ್ಷಣೆಗಾಗಿ ಅಗತ್ಯವಿರುವ ಕ್ರಮಗಳಿಗೆ ಅನುದಾನವನ್ನು ಒದಗಿಸುವ ಬಗ್ಗೆ ಕೃಷಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಿಎಂ ಹೇಳಿದರು.
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂಥೆ ರಾಜ್ಯದಲ್ಲಿರುವ ಪ್ರಮುಖ ಹೆದ್ದಾರಿಗಳ ನಿರ್ಮಾಣಕ್ಕೆ ಇರುವ ಅಡಚಣೆಗಳನ್ನು ಸರ್ಕಾರವು ನಿವಾರಿಸಿದ್ದು, ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರವು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿಕೊಡುವಂತೆ ಕೇಂದ್ರ ಭೂಸಾರಿಗೆ ಮತ್ತು ಜಲಸಂಪನ್ಮೂಲ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ, ನದಿ ನೀರು ಹಂಚಿಕೆ ಪ್ರಾಧಿಕಾರ ಮತ್ತು ಮೇಕೆದಾಟು ವಿಷಯಗಳ ಬಗ್ಗೆಯೂ ಸಚಿವರೊಂದಿಗೆ ಚರ್ಚಿಸಿರುವುದಾಗಿ ಮುಖ್ಯಮಂತ್ರಿಗಳ ತಿಳಿಸಿದರು.
Related Articles
Thank you for your comment. It is awaiting moderation.
Comments (0)