ಬೇಲ್ ಕ್ಯಾನ್ಸಲ್ ಬೆನ್ನಲ್ಲೇ ನಟ ದರ್ಶನ್ ಅರೆಸ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಷರತ್ತು ಬದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಪ್ರೀಂಕೋರ್ಟ್ ನಲ್ಲಿ ದರ್ಶನ್ ಜಾಮೀನು ರದ್ದುಗೊಳ್ಳುತ್ತಿದ್ದಂತೆ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದು, ದರ್ಶನ್ ಬಂಧನಕ್ಕೆ ಸಿದ್ದತೆ ನಡೆಸಿಕೊಂಡರು.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ನಾಗೇಶ್‌, ಗೋವಿಂದರಾಜನಗರ ಠಾಣೆ ಇನ್‌ಸ್ಪೆಕ್ಟರ್ ಸುಬ್ರಹ್ಮಣ್ಯ ನೇತೃತ್ವದಲ್ಲಿ ದರ್ಶನ್ ಅವರನ್ನು ಬಂಧಿಸಲಾಯಿತು. ನಂತರ ಅವರನ್ನು ಅನ್ನಪೂರ್ಣೇಶ್ವರಿನಗರ ಠಾಣೆಗೆ ಕರೆತರಲಾಯಿತು.

ಸತ್ಯಮಂಗಲದ ಅಂದೂರು ಬಳಿ ಜಾತ್ರೆಗೆ ತೆರಳಿದ್ದ ದರ್ಶನ್ ತಮ್ಮ ಫಾರ್ಮ್‌ಹೌಸ್‌ಗೆ ಕುದುರೆ ಖರೀದಿಸಲು ನಿರ್ಧರಿಸಿದ್ದರು. ಜಾತ್ರೆಯಲ್ಲಿ ಎರಡು ಕುದುರೆಗಳನ್ನು ಫೈನಲ್‌ ಮಾಡಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಸುಪ್ರೀಂಕೋರ್ಟ್ ತೀರ್ಪು ವಿಷಯ ತಿಳಿದು ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್​ಮೆಂಟ್​​ನ 15ನೇ ಮಹಡಿಯಲ್ಲಿರುವ ವಿಜಯಲಕ್ಷ್ಮೀ ಅವರ ಫ್ಲ್ಯಾಟ್​ ನಂ. 4154ಗೆ ಬಂದಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ದರ್ಶನ್ ಅವರು ವಿಜಯಲಕ್ಷ್ಮೀ ಫ್ಲ್ಯಾಟ್​ಗೆ ಹಿಂಬದಿ ಗೇಟ್​ನಿಂದ ಆಗಮಿಸಿದ್ದರು. ಈ ವೇಳೆ ಅಲ್ಲಿಯೇ ಅವರನ್ನು ಬಂಧನ ಮಾಡಲಾಗಿದೆ.

ಸದ್ಯ ಅನ್ನಪೂರ್ಣೇಶ್ವರಿನಗರ ಠಾಣೆಗೆ ದರ್ಶನ್ ಅವರನ್ನು ಕರೆತರಲಾಗಿದ್ದು, ಅಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುತ್ತದೆ ಎನ್ನಲಾಗಿದೆ.

ಇನ್ನು ಪ್ರಕರಣದ ಮೊದಲೇ ಆರೋಪಿ ಪವಿತ್ರಾಗೌಡ ಅವರನ್ನು ಪೊಲೀಸರು ಆರ್.ಆರ್. ನಗರ ನಿವಾಸದಲ್ಲಿ ಬಂಧಿಸಿದ್ದಾರೆ.

Related Articles

Comments (0)

Leave a Comment