ಚಿರಂಜೀವಿ ಸರ್ಜಾ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗ; ಸಂತಾಪ ಸೂಚಿಸಿದ ರಾಜಕೀಯ ಗಣ್ಯರು
- by Suddi Team
- June 7, 2020
- 15 Views

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕವಾಗಿ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.ರವಿಚಂದ್ರನ್, ಶಿವರಾಜ್ ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯರು ಅಗಲಿದ ನಟನಿಗೆ ಸಂತಾಪ ಸೂಚಿಸಿದ್ದಾರೆ.
ಇಂದು ನಮ್ಮ ಕನ್ನಡ ಚಿತ್ರರಂಗ ಒಬ್ಬ ಅದ್ಭುತ ಕಲಾ ಪುತ್ರನನ್ನು ಕಳೆದುಕೊಂಡಿದೆ. ಸದಾ ಲವಲವಿಕೆಯಿಂದ ಕನ್ನಡ ಚಿತ್ರರಂಗದ ಎಲ್ಲರಲ್ಲೂ ಚಿರಂಜೀವಿಯಾಗಿ ಉಳಿದ ಪ್ರತಿಭೆ ಈ ಚಿರಂಜೀವಿ.. ಆ ದೇವರು ನಿಮ್ಮ ಆತ್ಮಕ್ಕೆ ಶಾಂತಿ ನೀಡಲಿ ಎಂದು ರವಿಚಂದ್ರನ್ ಸರ್ಜಾ ಜೊತೆಗಿನ ಫೋಟೋ ಷೇರ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಶಿವರಾಜ್ ಕುಮಾರ್, ಜಗ್ಗೇಶ್, ದರ್ಶನ್,ಸುದೀಪ್,ಹಿರಿಯ ನಟಿ ಸುಮಲತಾ,ತಾರ ಸೇರಿದಂತೆ ಚಿತ್ರರಂಗದ ಗಣ್ಯರು ನಿರ್ದೇಶಕರು,ನಿರ್ಮಾಪಕರು,ಸಹಕಲಾವಿದರು ಚಿರಂಜೀವಿ ಸರ್ಜಾ ವ್ಯಕ್ತಿತ್ವವನ್ನು ಸ್ಮರಿಸುತ್ತಾ ಕಂಬನಿ ಮಿಡಿದಿದ್ದಾರೆ.
ಚಿತ್ರರಂಗದ ಗಣ್ಯರು ಮಾತ್ರವಲ್ಲ ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ ಅವರು, ಇನ್ನೂ ಪ್ರವರ್ಧಮಾನಕ್ಕೆ ಬರಬೇಕಿದ್ದ, ಉಜ್ವಲ ಭವಿಷ್ಯ ಹೊಂದಿದ್ದ ಕಲಾವಿದ ಅವರ ನಿಧನದಿಂದ ಕನ್ನಡ ಚಲನಚಿತ್ರ ರಂಗ ಓರ್ವ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಖ್ಯಾತ ಕಲಾ ಕುಟುಂಬದಿಂದ ಬಂದಿದ್ದ ಚಿರಂಜೀವಿ ಸರ್ಜಾ ಕುಟುಂಬ, ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದ ಸುಂದರ್ ರಾಜ್ ಕುಟುಂಬದೊಂದಿಗೆ ಬೆರೆತಿತ್ತು. ಹಾಲು ಜೇನಿನಂತೆ ಕೂಡಿದ್ದ ಈ ಕುಟುಂಬಕ್ಕೆ ಚಿರಂಜೀವಿ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
Related Articles
Thank you for your comment. It is awaiting moderation.
Comments (0)