ಕೆಪಿಸಿಸಿ ಕಚೇರಿ ಬಳಿ ಹ್ಯಾರಿಸ್ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ: ಲಘು ಲಾಠಿ ಪ್ರಹಾರ
- by Suddi Team
- June 8, 2018
- 18 Views
ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಶಾಸಕರ ಬಂಡಾಯ ಒಂದೆಡೆಯಾದರೆ, ಮತ್ತೊಂದೆಡೆ ಶಾಸಕರ ಬೆಂಬಲಿಗರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಸಕ ಎನ್.ಎ. ಹ್ಯಾರಿಸ್ಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಹ್ಯಾರಿಸ್ ಬೆಂಬಲಿಗನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಕೆಪಿಸಿಸಿ ಕಚೇರಿ ಬಳಿ ನಡೆದಿದೆ.
ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಬೆಂಬಲಿಗರು ಹಾಗೂ ಕಾರ್ಯಕರ್ತರು ಬೆಳಗ್ಗೆಯಿಂದ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಹ್ಯಾರಿಸ್ ಬೆಂಬಲಿಗ ಸಲೀಂ ಎಂಬಾತ ಕಟೌಟ್ ಕಟ್ಟಲು ನಿಲ್ಲಿಸಿದ್ದ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.
ಸ್ಥಳದಲ್ಲಿದ್ದ ಪೊಲೀಸರು ಸಲೀಂನನ್ನು ರಕ್ಷಿಸಿದ್ದು, ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರು ಕಚೇರಿ ಒಳಗೆ ತೆರಳದಂತೆ ಅಡ್ಡಲಾಗಿ ಕುಳಿತು ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.
ಮುಂಜಾಗ್ರತಾ ಕ್ರಮವಾಗಿ ಕೆಪಿಸಿಸಿ ಸಿಬ್ಬಂದಿ ಕಚೇರಿಯ ಬಾಗಿಲು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ.
ಕಾಂಗ್ರೆಸ್ ಕಚೇರಿಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಹ್ಯಾರಿಸ್ ಬೆಂಬಲಿಗನೊಬ್ಬ ಕೆಪಿಸಿಸಿ ಕಚೇರಿ ಬಳಿ ಇರುವ ಹೋರ್ಡಿಂಗ್ಸ್ ಮೇಲೆ ಏರಿ ಪ್ರತಿಭಟನೆ ನಡೆಸಿದ್ದು, ಜತೆಗೆ ಬೆಂಬಲಿಗನೊಬ್ಬ ತಲೆ ಬೋಳಿಸಿಕೊಳ್ಳವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ.
Related Articles
Thank you for your comment. It is awaiting moderation.
Comments (0)