- ಇತರೆ
- ಮುಖ್ಯ ಮಾಹಿತಿ
- ರಾಜ್ಯ
- ಸಾಮಾಜಿಕ
- Like this post: 0
ಕೊಡಗು ಪ್ರವಾಹದಿಂದ ಏಷ್ಟೇಲ್ಲಾ ಹಾನಿಯಾಗಿದೆ: ಸಿಎಂ ಮಾಹಿತಿ
- by Suddi Team
- August 20, 2018
- 94 Views

ಕೊಡಗು: ಶತಮಾನದ ಮಹಾಮಳೆಗೆ ಹಲವು ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗಿದ್ದು , 12 ಜನ ಮೃತಪಟ್ಟಿದ್ದಾರೆ. ಸುಮಾರು 845 ಮನೆಗಳು ಪೂರ್ಣ ಹಾನಿಗೊಳಗಾಗಿದ್ದು, 773 ಭಾಗಶ: ಹಾನಿಯಾಗಿದೆ. 123 ಕಿ.ಮೀ. ರಸ್ತೆ, 58 ಸೇತುವೆ, 278 ಸರ್ಕಾರಿ ಕಟ್ಟಡ, 3800 ವಿದ್ಯುತ್ ಕಂಬ ಹಾನಿಗೊಳಗಾಗಿವೆ. ಹಲವು ರಸ್ತೆಗಳು ಸಂಪರ್ಕ ಕಡಿತಗೊಂಡಿವೆ ಎಂದು ಸಿಎಂ ಕುಮಾರಸ್ವಾಮಿ ಮಾಹಿತಿ ನೀಡಿದರು.
ಎರಡು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗಿದೆ ನಂತರ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಕೊಡಗಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಬೆಳಿಗ್ಗೆ 10.00 ಗಂಟೆವರೆಗೆ 4320 ಜನರನ್ನು ಆಪತ್ತಿನಿಂದ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ. ನಿನ್ನೆಯಿಂದ ಮಳೆಯ ಭೀಕರತೆ ಸ್ಪಲ್ಪ ತಗ್ಗಿರುವುದರಿಂದ, ಪರಿಹಾರ ಕಾರ್ಯಗಳನ್ನು ಚುರುಕುಗೊಂಡಿವೆ ಎಂದು ಹೇಳಿದರು.
ಜಿಲ್ಲಾಡಳಿತ , ಪೊಲೀಸ್ ಇಲಾಖೆ, ರಾಜ್ಯ ಸಶಸ್ತ್ರ ಮೀಸಲು ಪಡೆ, ಭೂ ಸೇನೆ, ವಾಯು ಪಡೆ, ನೌಕಾ ದಳ, ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ (ಎನ್ಡಿಆರ್ಎಫ್) ತಂಡಗಳು, ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಧಿಕಾರಿಗಳು, ಎನ್ಸಿಸಿ, ನಾಗರೀಕ ರಕ್ಷಣಾ ದಳ, ಗೃಹ ರಕ್ಷಕ ದಳ ಸೇರಿದಂತೆ ಒಟ್ಟು 1725 ವಿಶೇಷ ತರಬೇತಿ ಪಡೆದ ತಜ್ಞರು ಯುದ್ಧೋಪಾದಿಯಲ್ಲಿ ಪ್ರತಿ ದಿನ 24 ಗಂಟೆಗಳ ಕಾಲ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ವಾಯುಪಡೆಯ ಎಂ-17 ಹೆಲಿಕಾಪ್ಟರ್ ಹಾರಂಗಿಯಿಂದ ಕಾರ್ಯನಿರ್ವಹಿಸುತ್ತಿವೆ.
ಪ್ರತಿ ದಿನ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ನಿರಂತರ ಮಾಹಿತಿಯನ್ನು ಒದಗಿಸುತ್ತಿದ್ದಾರೆ. ರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು, ಕೇಂದ್ರ ರಕ್ಷಣಾ ಸಚಿವರು ದೂರವಾಣಿ ಮೂಲಕ ಮಾತನಾಡಿ, ಪರಿಸ್ಥಿತಿಯ ವಿವರ ಪಡೆದಿರುತ್ತಾರೆ. ಪೂರ್ಣ ಸಹಕಾರವನ್ನು ನೀಡಿದ್ದಾರೆ. ಇಂದು ಮಧ್ಯಾಹ್ನ ಮುಖ್ಯ ಕಾರ್ಯದರ್ಶಿಗಳು ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿಯ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪರಿಹಾರ ಕಾಮಗಾರಿ ರಾಜ್ಯ ಸರ್ಕಾರಕ್ಕೆ ಸವಾಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಡಿಜಿಪಿ ಅಗ್ನಿ ಶಾಮಕ ದಳ, ಇಬ್ಬರು ಎಡಿಜಿಪಿಗಳು, ಇಬ್ಬರು ಅಪರ ಮುಖ್ಯ ಕಾರ್ಯದರ್ಶಿಗಳು ಸ್ಥಳದಲ್ಲೇ ಮುಕ್ಕಾಂ ಮಾಡಿ , ಪರಿಹಾರ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಕೊಡಗಿನ ನೆರೆಯ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೊಬೆಷನರಿ ಐಎಎಸ್ ಅಧಿಕಾರಿಗಳನ್ನು ಕೊಡಗಿಗೆ ನಿಯೋಜಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 41 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 09 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು 6620 ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿದ್ದಾರೆ. ಪರಿಹಾರ ಕೇಂದ್ರಗಳಿಗೆ ಹಾಲು, ಕುಡಿಯುವ ನೀರು ವ್ಯವಸ್ಥೆಯನ್ನು ಮಾಡಲಾಗಿದೆ. ನೆರವಿಗಾಗಿ ಒದಗಿ ಬರುತ್ತಿರುವ ಪರಿಹಾರ ಸಾಮಗ್ರಿಗಳನ್ನು ಮಡಿಕೇರಿಯಲ್ಲಿರುವ ಎಪಿಎಂಸಿ ಯಾರ್ಡ್ ನಲ್ಲಿ ಸಂಗ್ರಹಿಸಿ ಪಂಚಾಯತಿಗಳ ಮೂಲಕ ಜನರಿಗೆ ವಿತರಣೆ ಮಾಡಲಾಗುತ್ತಿದೆ.
ಐದು ವಿಶೇಷ ವೈದ್ಯಕೀಯ ತಂಡಗಳು, 10 ರೆವಿನ್ಯೂ ಅಧಿಕಾರಿಗಳ ತಂಡಗಳನ್ನು ಪರಿಹಾರ ಕಾಮಗಾರಿಗಳಿಗಾಗಿ ವಿಶೇಷವಾಗಿ ನಿಯೋಜಿಸಲಾಗಿದೆ. 60 ಜೆಸಿಬಿಗಳು, 20 ಫೋರ್ ವೀಲ್ ಡ್ರೈವ್ನ ಬೊಲೆರೋ ವಾಹನಗಳು ಕಾರ್ಯತತ್ಪರವಾಗಿದೆ. ಕೊಡಗು ಜಿಲ್ಲೆಯಲ್ಲಿ ತಕ್ಷಣವೇ ಮುಂದಿನ ಹತ್ತು ದಿನಗಳೊಳಗೆ ಸಂತ್ರಸ್ತರಿಗೆ ತಾತ್ಕಾಲಿಕ ಅಲ್ಯುಮಿನಿಯಂ ಶೆಡ್ ಗಳನ್ನು ನಿರ್ಮಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಸಂತ್ರಸ್ತರಿಗೆ ಅಗತ್ಯವಾದ ಶೆಡ್ ಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗುತ್ತಿದೆ. ಕುಶಾಲನಗರದ ಮೂರು ಬಡಾವಣೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ನೀರನ್ನು ಹೊರಕ್ಕೆ ಪಂಪ್ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ತಾಂತ್ರಿಕ ತಂಡ ಕೊಡಗಿಗೆ ತೆರಳಿದೆ.
ನೆರೆ- ಪ್ರವಾಹದ ಬಳಿಕ ನಮಗೆ ಎದುರಾಗುವ ಪ್ರಮುಖ ಸವಾಲೆಂದರೆ ಸಾರ್ವಜನಿಕ ಆರೋಗ್ಯ. ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ವೈದ್ಯ ಮತ್ತು ವೈದ್ಯೇತರ ಸಿಬ್ಬಂದಿ ಸೇರಿದಂತೆ ಆರೋಗ್ಯ ಇಲಾಖೆಯ ವಿಶೇಷ ಘಟಕಗಳನ್ನು ರೂಪಿಸಿ ನಿಯೋಜಿಸಲಾಗಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸ್ಥಳೀಯ ಕೂಲಿ ಕಾರ್ಮಿಕರಿಗೆ ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ ಮುಂತಾದ ಪಟ್ಟಣಗಳಲ್ಲಿ ಬಿದ್ದಿರುವ ತ್ಯಾಜ್ಯವಸ್ತುಗಳ ನಿರ್ಮೂಲನಾ ಕಾಮಗಾರಿಯನ್ನು ವಹಿಸಲು ಸೂಚಿಸಲಾಗಿದೆ. ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಈಗಾಗಲೇ ಸರಬರಾಜು ಮಾಡಿರುವ ಪುಸ್ತಕ, ಸಮವಸ್ತ್ರ ಹಾನಿಗೊಳಗಾಗಿರುವುದರಿಂದ ಮತ್ತೊಂದು ಸೆಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನು ಸರಬರಾಜು ಮಾಡಲು ಸೂಚಿಸಲಾಗಿದೆ.
ಪರಿಹಾರ ಕೇಂದ್ರಗಳಲ್ಲಿರುವ ಸುಮಾರು 5800 ನೆರೆ ಸಂತ್ರಸ್ತರಿಗೆ ತಕ್ಷಣ ಪರಿಹಾರವಾಗಿ ಪ್ರತಿ ಕುಟುಂಬಕ್ಕೆ ರೂ.3800/- ನೀಡಲು ಸೂಚಿಸಲಾಗಿದೆ. ಹಾಗೂ ಸಂಕಷ್ಟಕ್ಕೊಳಗಾಗಿರುವ 50 ಸಾವಿರ ಕುಟುಂಬಗಳಿಗೆ ದಿನೋಪಯೋಗಿ ದಿನಸಿ ಸಾಮಾಗ್ರಿಗಳನ್ನು ಪ್ರತಿ ಕುಟುಂಬದ ಮನೆಯ ಬಾಗಿಲಿಗೆ ತಲುಪಿಸಲು 10 ಮೊಬೈಲ್ ದಿನಸಿ ಸಾಮಾಗ್ರಿಗಳ ವಿತರಣಾ ಘಟಕಗಳನ್ನು ಪ್ರಾರಂಬಿಸಲು ಸೂಚಿಸಲಾಗಿದೆ.
ಭಾಗಮಂಡಲ-ನಾಪೊಕ್ಲು- ಅಯ್ಯಂಗೇರಿ ,ಸುಳ್ಯ -ಮಡಿಕೇರಿ ನಡುವಿನ ಸಂಪರ್ಕ ರಸ್ತೆಯಲ್ಲಿ ಹಲವೆಡೆ ಮಣ್ಣು ಕುಸಿತ ಉಂಟಾಗಿದ್ದು, ಲೋಕೋಪಯೋಗಿ ಇಲಾಖೆ ರಸ್ತೆ ದುರಸ್ತಿಗೊಳಿಸಲು ಕಾರ್ಯತತ್ಪರವಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಾಗಿರುವ ಅಡೆತಡೆಗಳನ್ನು ಸರಿಪಡಿಸಲು ಕೆಪಿಟಿಸಿಎಲ್/ ಚೆಸ್ಕಾಂ ವಿಶೇಷ ತಂಡವನ್ನು ರವಾನಿಸಿದೆ.
ಕೊಡಗು ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಕಳೆದ ಮೂರು ತಿಂಗಳಿನಲ್ಲಿ ಇಪ್ಪತ್ತು ದಿನ ರಜೆ ಇದ್ದುದಸರಿಂದ, ವಿಶೇಷ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಿ, ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ ನಷ್ಟದ ಅಂದಾಜು ಪಟ್ಟಿಯನ್ನು ತಯಾರಿಸಲು ಹಾಗೂ ಮನೆಗಳನ್ನು ಕಟ್ಟುವ ಕಾರ್ಯದ ಮೇಲ್ವಿಚಾರಣೆ ಮಾಡಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿನ ಪ್ರಕೃತಿ ವಿಕೋಪ/ ಅತಿವೃಷ್ಟಿಯಲ್ಲಿ ನೊಂದ ಸಂತ್ರಸ್ತರಿಗೆ ಸಹಾಯ ಮಾಡುವ ದಾನಿಗಳು ಈ ಕೆಳಕಂಡ ಮುಖ್ಯಮಂತ್ರಿಯವರ ಪರಿಹಾರ ನಿಧಿ: ಖಾತೆಗೆ ದೇಣಿಗೆ ಸಲ್ಲಿಸಬಹುದಾಗಿರುತ್ತದೆ.
ಖಾತೆಯ ಹೆಸರು : ಮುಖ್ಯಮಂತ್ರಿಯವರ ಪರಿಹಾರ ನಿಧಿ ಪ್ರಕೃತಿ ವಿಕೋಪ 2018.
ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಶಾಖೆ : ವಿಧಾನ ಸೌಧ
ಖಾತೆ ಸಂಖ್ಯೆ : 37887098605
ಐ.ಎಫ್.ಎಸ್.ಸಿ. ಕೋಡ್ : ಎಸ್ಬಿಐಎನ್ 0040277
ಎಂ.ಐ.ಸಿ.ಆರ್. ಸಂಖ್ಯೆ : 560002419
“ಈ ರೀತಿ ಸಲ್ಲಿಸುವ ದೇಣಿಗೆಗೆ ಆದಾಯ ತೆರಿಗೆ ಕಾಯ್ದೆ 80 -ಜಿ ಅಡಿ ಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ.”
Related Articles
Thank you for your comment. It is awaiting moderation.
Comments (0)