20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ ಜನರ ಪ್ರಾಣ ಉಳಿಸಿ: ಎಚ್ಡಿಕೆ

ಬೆಂಗಳೂರು: ಉದ್ಯಾನ ನಗರಿಯಲ್ಲಿ ಕೊರೋನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೋನಾದಿಂದ ಜನರ ಜೀವ ರಕ್ಷಣೆಯಾಗಬೇಕಾದ್ರೆ ಕನಿಷ್ಟ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಬೇಕು ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಟ್ವೀಟ್ ಮೂಲಕ ಸರ್ಕಾರವನ್ನು ಒತ್ತಾಯಿಸಿರೋ ಎಚ್ಡಿಕೆ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಅಂತಾ ಸಲಹೆ ನೀಡಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ. ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು.

Related Articles

Comments (0)

Leave a Comment