ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು: ಎಚ್ಡಿಕೆ, ಸಿದ್ದು ವಿರೋಧ
- by Suddi Team
- May 27, 2020
- 16 Views

ಬೆಂಗಳೂರು: ಯಲಹಂಕ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾವರ್ಕರ್ ಹೆಸರಿಡಲು ರಾಜ್ಯ ಸರ್ಕಾರ ಮುಂದಾಗಿದ್ದು ರಾಜ್ಯದಲ್ಲಿ ವಿವಾದದ ಕಿಡಿ ಹೊತ್ತಿಸಿದೆ. ಈ ಸಂಬಂಧ ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿವೆ.
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸರ್ಕಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು. ಸ್ವಾತಂತ್ರ್ಯಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹ ಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೂ ಇದೇ ವಿಚಾರವಾಗಿ ಟ್ವೀಟ್ ಮಾಡಿರೋ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯಲಹಂಕ ಮೇಲ್ಸೆತುವೆಗೆ ವಿ.ಡಿ.ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನ. ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡಬೇಕೆಂದು ಸಿಎಂ ಅವರನ್ನು ಆಗ್ರಹಿಸುತ್ತೇನೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ ಸೂತ್ರಧಾರರೇ ಹೊರತು, ಚುನಾಯಿತ ಸರ್ಕಾರ ಅಲ್ಲ ಎನ್ನುವುದಕ್ಕೆ ಯಲಹಂಕ ಮೇಲ್ಸೆತುವೆಗೆ ಸಾವರ್ಕರ್ ಹೆಸರಿಡುವ ಅವಸರದ ನಿರ್ಧಾರವೇ ಪುರಾವೆ. ಸಿಎಂ ಬಿಎಸ್ವೈ ಅವರೇ, ನೀವು ವಿರೋಧ ಪಕ್ಷಗಳ ಸಹಕಾರ ಬಯಸುತ್ತಿರುವುದು ಇಂತಹ ಜನವಿರೋಧಿ ನಿರ್ಧಾರಗಳಿಗಾಗಿಯೇ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Related Articles
Thank you for your comment. It is awaiting moderation.
Comments (0)