ಬಿಜೆಪಿಯವರು ಮೈತ್ರಿ ಸರ್ಕಾರ ಕೆಡವಲು ಪ್ರಯತ್ನಿಸಿದ್ದು ಸತ್ಯ: ಸಿದ್ಧು

ಬೆಂಗಳೂರು: ಬಿಜೆಪಿಯವರು ಲಜ್ಜೆಗೆಟ್ಟು ಸರ್ಕಾರವನ್ನು ಅಸ್ತಿರಗೊಳಿಸಲು ಯತ್ನಿಸಿದ್ದು ಸತ್ಯ. ನಮ್ಮ ಶಾಸಕರಿಗೆ ಆಮಿಷವೊಡ್ಡಿದ್ದನ್ನು ಶಾಸಕರೇ ಹೇಳಿಕೊಂಡಿದ್ದಾರೆ. ಆದರೆ, ಜಾರಕಿಹೊಳಿ ಸಹೋದರರು ಸೇರಿದಂತೆ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಜಾರಕಿಹೊಳಿ ಸಹೋದರರದ್ದು ಯಾವುದೇ ಬೇಡಿಕೆಯೂ ಇಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳೆಲ್ಲಾ ಆಧಾರ ರಹಿತ. ಮೈತ್ರಿ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ ಎಂದು ಹೇಳಿದರು.

ಬಿಜೆಪಿಯವರು ಸರ್ಕಾರವನ್ಮು ಅಸ್ತಿರಗೊಳಿಸಲು ಪ್ರಯತ್ನಿಸಿದ್ದು ಸತ್ಯ. ನಮ್ಮ ಶಾಸಕರಿಗೆ ಆಮಿಷವೊಡ್ಡಿದ್ದನ್ನು ಶಾಸಕರೇ ಹೇಳಿಕೊಂಡಿದ್ದಾರೆ. ಆದರೆ, ಜಾರಕಿಹೊಳಿ ಸಹೋದರರು ಸೇರಿದಂತೆ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ನಾಳೆ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಚರ್ಚಿಸಲು ದೆಹಲಿಗೆ ಹೋಗುತ್ತಿದ್ದೇವೆ. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ‌. ಈ ಮೊದಲು ಸೆಪ್ಟೆಂಬರ್ 15-16ರೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದೆವು‌. ಆದರೆ, ವಿಧಾನ ಪರಿಷತ್ ಚುನಾವಣೆ ಘೋಷಣೆಯಾದ ಕಾರಣ ಸಚಿವ ಸಂಪುಟ ವಿಸ್ತರಣೆ ಮುಂದೆ ಹೋಗಿದೆ. ಸೂಕ್ತ ಸಮಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.

ನಮ್ಮ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಎಲ್ಲರೂ ಆಕಾಂಕ್ಷಿಗಳೇ, ಜತೆಗೆ ರಮೇಶ ಜಾರಕಿಹೊಳಿ ಸಚಿವರಾದ ಕಾರಣ ಶಾಸಕರು ತಮ್ಮ ಕ್ಷೇತ್ರದ ಕೆಲಸಗಳಿಗೆ ಅವರನ್ನು ಭೇಟಿ ಮಾಡುವುದು ಸಹಜ ಪ್ರಕ್ರಿಯೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.

Related Articles

Comments (0)

Leave a Comment