ವಕ್ಫ್ ಆಸ್ತಿ ದುರ್ಬಳಕೆ: ಮುಂದಿನ ಅಧಿವೇಶನದಲ್ಲಿ ಲೋಕಾಯುಕ್ತ ಮಧ್ಯಂತರ ವರದಿ ಮಂಡನೆ

ಬೆಂಗಳೂರು, ಜೂನ್ 16-ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ವಕ್ಫ್ ಆಸ್ತಿ ದುರ್ಬಳಕೆ ಕುರಿತಂತೆ ಲೋಕಾಯುಕ್ತ ತನಿಖೆಯ ಮಧ್ಯಂತರ ವರದಿಯನ್ನು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ವಕ್ಫ್ ಮಂಡಳಿ ಮತ್ತು ಜವಳಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ವಕ್ಫ್ ಆಸ್ತಿಗಳ ದುರ್ಬಳಕೆ ಹಾಗೂ ಒತ್ತುವರಿ ಬಗ್ಗೆ ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಲೋಕಾಯುಕ್ತರು ಮಧ್ಯಂತರ ವರದಿ ಸಲ್ಲಿಸಿದ್ದು, ಈ ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕೋವಿಡ್ 19 ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಪವಿತ್ರ ಹಜ್ ಯಾತ್ರೆಯ ಕುರಿತು ಸೌದಿ ಅರೇಬಿಯಾದಿಂದ ಯಾವುದೇ ಮಾಹಿತಿ ಸ್ವೀಕೃತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ 2020ರ ಯಾತ್ರೆಗೆ ಆಯ್ಕೆಯಾದ ಯಾತ್ರಾರ್ಥಿಗಳು ತಮ್ಮ ಮುಂಗಡ ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕೈಮಗ್ಗ ಮತ್ತು ಜವಳಿ ಇಲಾಖೆ:

ನೇಕಾರ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ 2000 ರೂ. ಆರ್ಥಿಕ ನೆರವು ನೀಡಲು ಆನ್ ಲೈನ್ ನಲ್ಲಿ 18991 ಅರ್ಜಿಗಳು ಸ್ವೀಕೃತವಾಗಿವೆ. ಶೀಘ್ರವೇ ನೇಕಾರರಿಗೆ ನೆರವು ತಲುಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

14.15 ಕೋಟಿ ರೂ. ಮೌಲ್ಯದ ಕೈಮಗ್ಗ ಉತ್ಪನ್ನ ದಾಸ್ತಾನು ಹಾಗೂ 942.66 ಕೋಟಿ ರೂ. ಮೌಲ್ಯದ ವಿದ್ಯುತ್ ಮಗ್ಗ ಉತ್ಪನ್ನಗಳ ದಾಸ್ತಾನು ಮಾರಾಟವಾಗದೆ ಉಳಿದಿದೆ. ಇದರಲ್ಲಿ ವಿದ್ಯುತ್ ಮಗ್ಗದ ಸೀರೆಗಳನ್ನು ಉಚಿತ ದರದಲ್ಲಿ ಖರೀದಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚಿಸಲಾಗುವುದು ಎಂದು ತಿಳಿಸಿದರು.

ವಿದ್ಯುತ್ ಮಗ್ಗ ಘಟಕಗಳ ಕೂಲಿ ಕಾರ್ಮಿಕರಿಗೆ ಒಂದು ಬಾರಿಗೆ ಆರ್ಥಿಕ ನೆರವು ನೀಡಲು ಆನ್ ಲೈನ್ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ.

ಮೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮೂವರು ನೇಕಾರರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ ನೀಡಲು ಸೂಚಿಸಿದರು.

ಸಭೆಯಲ್ಲಿ ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ, ವಕ್ಫ್ ಮತ್ತು ಹಜ್ ಸಚಿವ ಪಭು ಚವ್ಹಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಮತ್ತು ಎಂಎಸ್ ಎಂಇ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Comments (0)

Leave a Comment