ವಸತಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ, ನಿರ್ವಹಣೆಗೆ 1365 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಗೆ ಅನುಮೋದನೆ : ಗೋವಿಂದ ಎಂ ಕಾರಜೋಳ

ಬೆಂಗಳೂರು. ಜೂ. 26: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸೇರಿದಂತೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪೂರಕ ಇತರ ಕಾರ್ಯಚಟುವಟಿಕೆಗಳಿಗೆ ಪ್ರಸಕ್ತ ಸಾಲಿನಲ್ಲಿ 1365 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 74 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆವಹಿಸಿದ್ದ ಅವರು, ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳ ಅನುಭವ ಸಾರವನ್ನು ಒಳಗೊಂಡ “ಸಮರ್ಥರ ಸಾಧನೆ’’, ಭೋದನಾ ಸಾಮಗ್ರಿ, ನೈಜ ಫಲಿತಾಂಶಗಳನ್ನು ಒಳಗೊಂಡ “ಸಾಧನ ದರ್ಪಣ’’ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಕಥನ “ ನಮ್ಮ ಪ್ರಯಾಣದ ಹೆಜ್ಜೆಗಳು’’ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ತಜ್ಞರಾದ ಡಾ. ಗುರುರಾಜ ಕರಜಗಿ ಇವರನ್ನು ಶೈಕ್ಷಣಿಕ ಸಲಹೆಗಾರರನ್ನಾಗಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಶ್ರೀ ಬೆಳ್ಳಿಶೆಟ್ಟಿ ಅವರನ್ನು ಸಮಾಲೋಚಕರನ್ನಾಗಿ ನೇಮಿಸಲಾಗುವುದು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳೂರು, ಬಾಗಲಕೋಟೆ ಜಿಲ್ಲೆಯ ಮುಧೋಳ್ ತಾಲೂಕಿನ ಬೆಳಗಲಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂದಾಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಕ್ರೀಡಾ ವಸತಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು.

ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪಠ್ಯಪುಸ್ತಕಗಳನ್ನು ಒದಗಿಸಲು ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಯಿತು. 12 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದ್ದು, ಸಿಬಿಎಸ್‍ಸಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

Related Articles

Comments (0)

Leave a Comment