ಪ್ರವಾಹ ಪೀಡಿತರ ರಕ್ಷಣೆಗೆ ಕ್ರಮ: ಸಿಎಂ ಕುಮಾರಸ್ವಾಮಿ
- by Suddi Team
- August 16, 2018
- 100 Views
ಬೆಂಗಳೂರು: ಹಟ್ಟಿಹೊಳೆ ಬಳಿಯ ಗ್ರಾಮದ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಲ್ಲಿನ ಜನರನ್ನು ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಅಲ್ಲದೆ ತಾವು ವಾಯುಪಡೆಯ ಅಧಿಕಾರಿಗಳೊಂದಿಗೆ , ಈ ಜಿಲ್ಲೆಗಳಲ್ಲಿ ಜನರ ರಕ್ಷಣೆಗೆ ನೆರವು ನೀಡುವ ಕುರಿತು ಮಾತುಕತೆ ನಡೆಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕೊಡಗಿನಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಮೊಕ್ಕಾಮ್ ಹೂಡಿದ್ದು ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆಗೆ ಕ್ರಮ ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಖುದ್ದು ಮಾತನಾಡಿದ್ದು ವಸ್ತುಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ.
ಸಾರ್ವಜನಿಕರಿಗೆ ನೆರವು ನೀಡಲು, ಅಗತ್ಯ ಬಿದ್ದಲ್ಲಿ ಗಂಜಿ ಕೇಂದ್ರ ತೆರೆಯಲು ಹಾಗೂ ಇತರ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳು ಕೂಡಲೇ ಜಿಲ್ಲೆಗಳಿಗೆ ತೆರಳುವಂತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಈ ಜಿಲ್ಲೆಗಳಲ್ಲಿಯೇ ಮೊಕ್ಕಾಂ ಹೂಡಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.
Related Articles
Thank you for your comment. It is awaiting moderation.
Comments (0)