ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಜನಾಂದೋಲನಕ್ಕೆ ಬಿಜೆಪಿ ತೀರ್ಮಾನ: ಬಸವರಾಜ ಬೊಮ್ಮಾಯಿ
- by Suddi Team
- June 23, 2025
- 88 Views

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ. ಪಕ್ಷದ ಪ್ರಮುಖರ ಜತೆ ಚರ್ಚಿಸಿ ಸಧ್ಯದಲ್ಲೇ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜತೆ ಚರ್ಚೆ, ಚಿಂತನ-ಮಂಥನ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ. ಅದರಂತೆ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಎಲ್ಲರೂ ಸೇರಿ ಶೀಘ್ರದಲ್ಲೇ ಜನಾಂದೋಲನ ಪೂರ್ವಭಾವಿ ಸಭೆ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ. ಆಡಳಿತ ಪಕ್ಷದ ಶಾಸಕರು ಮಾತಾಡಿದರೂ ಸಿಎಂ ಹಾಗೂ ಡಿಸಿಎಂ ತುಟಿ ಪಿಟಕ್ ಅನ್ನುತ್ತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. ಸಚಿವ ಸಂಪುಟದಲ್ಲೂ ಸಾಮರಸ್ಯ ವಿಶ್ವಾಸ ಇಲ್ಲ. ಸಚಿವರು ಸಂಪುಟದಲ್ಲಿ ಎತ್ತುವ ಪ್ರಶ್ನೆಗಳಿಗೆ ಸ್ಪಂದನೆ ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಬಹಿರಂಗವಾಗಿ ಪತ್ರ ಬರೆಯುತ್ತಿದ್ದಾರೆ ಎಂದರು.
ಈಗಾಗಲೇ ಸರ್ಕಾರದ ವಿರುದ್ದ ಪಿ.ಡಬ್ಲ್ಯುಡಿ ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ಲಿಕ್ಕರ್ ಶಾಪ್ ಅಸೋಸಿಯೇಷನ್ನವರು ಎಲ್ಲದಕ್ಕೂ ಹಣ ವಸೂಲಿ ಮಾಡುತ್ತಿದ್ದಾರೆ. ಅಧಿಕಾರಿಗಳ ವರ್ಗಾವಣೆಗೂ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಕಂಪ್ಲೇಂಟ್ ಮಾಡಿದ್ದಾರೆ. ಕೆ.ಇ.ಬಿ ಕಾಂಟ್ರಾಕ್ಟರ್ಸ್ 500 ರೂ. ಬೆಲೆಯ ಸ್ಮಾರ್ಟ್ ಮೀಟರ್ಗೆ 4 ರಿಂದ 5 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಕಂಪ್ಲೇಂಟ್ ಮಾಡಿದ್ದಾರೆ. ಎಲ್ಲ ಅಸೋಸಿಯೇಷನ್ನವರು ಲಂಚಾವತಾರದ ಬಗ್ಗೆ ಬಹಿರಂಗಗೊಳಿಸಿದರೂ ಸರ್ಕಾರ ಇದಕ್ಕೆ ಯಾವುದೇ ರೀತಿಯ ಸ್ಪಂದನೆ ಮಾಡದಿರುವುದನ್ನು ನೋಡಿದರೆ ಎಲ್ಲರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ ಇದೆಲ್ಲವನ್ನೂ ಜನರ ಮುಂದಿಡಲಿದ್ದೇವೆ ಎಂದರು.
Related Articles
Thank you for your comment. It is awaiting moderation.
Comments (0)