ಬಿಐಇಸಿಯಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗೆ ಸಿಎಂ ಯಡಿಯೂರಪ್ಪ ಭೇಟಿ…!
- by Suddi Team
- July 9, 2020
- 23 Views

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ಇಂದು ಬಿಐಇಸಿಯಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಾ,
ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ.ಈ ನಿಟ್ಟಿನಲ್ಲಿ ಇಂದು ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.10,100 ಹಾಸಿಗೆ ಸಾಮರ್ಥ್ಯದ ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಪ್ರತಿ ನೂರು ಮಂದಿಗೆ ಒಬ್ಬ ವೈದ್ಯ, ಇಬ್ಬರು ನರ್ಸ್ ಗಳು, ಒಬ್ಬ ಸಹಾಯಕರು, ಒಬ್ಬರು ಸ್ವಚ್ಛತಾ ಸಿಬ್ಬಂದಿ ಮತ್ತು ಇಬ್ಬರು ಬಿಬಿಎಂಪಿ ಮಾರ್ಷಲ್ ಗಳನ್ನು ನಿಯೋಜಿಸಲಾಗುತ್ತಿದೆ. ವೈದ್ಯರು,, ನರ್ಸ್, ಸಹಾಯಕರು, ಸ್ವಚ್ಛತಾ ಸಿಬ್ಬಂದಿ, ಬಿಬಿಎಂಪಿ ಮಾರ್ಷಲ್ ಮತ್ತು ಪೊಲೀಸರು ಸೇರಿದಂತೆ ಒಟ್ಟು 2200 ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು. ಸೊಂಕಿತರಿಗೆ ಉತ್ತಮ ಊಟೋಪಚಾರದ ವ್ಯವಸ್ಥೆ, ಮನರಂಜನೆಗಾಗಿ ಟಿವಿ, ಕೇರಂ ಬೋರ್ಡ್ ಚೆಸ್, ಮತ್ತಿತರ ಅನುಕೂಲಗಳನ್ನು ಸಹ ಕಲ್ಪಿಸಲಾಗುತ್ತಿದೆ ಎಂದರು.
ಇವರ ಆರೈಕೆ ಹಾಗೂ ಮೇಲ್ವಿಚಾರಣೆಗೆ ನಿಯೋಜಿಸುವ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಸಾಮಗ್ರಿ, ತುರ್ತು ಚಿಕಿತ್ಸಾ ಸೌಲಭ್ಯಗಳು, ಐಸಿಯು ಘಟಕ, ಇಸಿಜಿ, ಆಕ್ಸಿಜನ್ ಸಪೋರ್ಟ್, ಪ್ರಥಮ ಚಿಕಿತ್ಸೆ, ಫಾರ್ಮಸಿ ಮೊದಲಾದ ಸೌಲಭ್ಯಗಳನ್ನು ಒದಗಿಸಲಾಗುವುದು.ಜೊತೆಗೆ ಸಮೀಪದ ಆಸ್ಪತ್ರೆಯೊಂದಿಗೆ ಸಂಯೋಜನೆ ಹಾಗೂ ದಿನದ 24 ಗಂಟೆಯೂ ಇವುಗಳನ್ನು ಮೇಲ್ವಿಚಾರಣೆ ನಡೆಸುವ ನಿಯಂತ್ರಣಾ ಕೊಠಡಿ ಸ್ಥಾಪಿಸಲಾಗುತ್ತಿದೆ.ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ಸೋಂಕಿತರ ಬೆಡ್ ಶೀಟ್, ಬ್ಲಾಂಕೆಟ್ ತೊಳೆಯಲು ಲಾಂಡ್ರಿ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ ಎಂದರು.
ಈ ಕೇಂದ್ರದಲ್ಲಿ ಯಾವುದೇ ರೋಗ ಲಕ್ಷಣ ಇಲ್ಲದ ಹಾಗೂ ಅತಿ ಕಡಿಮೆ ಲಕ್ಷಣ ಹೊಂದಿರುವ ಸೋಂಕಿತರ ಆರೈಕೆ ಮಾಡಲಾಗುವುದು.ನಗರದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಅಗತ್ಯವಿರುವ ವ್ಯಕ್ತಿಗಳಿಗೆ ಹಾಸಿಗೆ ಒದಗಿಸಲು ಅನುವಾಗುವಂತೆ ಈ ವ್ಯವಸ್ಥೆ ರೂಪಿಸಲಾಗಿದೆ ಎಂದರು.
ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾದಾಗಿನಿಂದ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಂಡಿದೆ. ಲೋಪ ದೋಷಗಳು ಗಮನಕ್ಕೆ ಬಂದ ಕೂಡಲೇ ಅವುಗಳನ್ನು ಸರಿಪಡಿಸುವ ಪ್ರಯತ್ನ ಮಾಡಲಾಗಿದೆ.ಈಗಾಗಲೇ ಹಾಸಿಗೆ ಹಂಚಿಕೆಗೆ ಪಾರದರ್ಶಕ ಕೇಂದ್ರೀಕೃತ ವ್ಯವಸ್ಥೆ ಮಾಡಲಾಗಿದೆ. ಸಹಾಯವಾಣಿಗಳನ್ನು ಸಹ ಸ್ಥಾಪಿಸಲಾಗಿದೆ.ಜನತೆ ವಿಶ್ವಾಸ ಕಳೆದುಕೊಳ್ಳಬಾರದು. ಸ್ವಲ್ಪ ತಾಳ್ಮೆಯಿಂದ ನಮ್ಮ ಜೊತೆ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.
ಕೋವಿಡ್ ಸೋಂಕು ತಗುಲಿರುವುದು ದೃಢ ಪಟ್ಟ ಕೂಡಲೇ ಅಂಬ್ಯುಲೆನ್ಸ್ ಬರುವುದು ವಿಳಂಬವಾದಲ್ಲಿ, ಅಥವಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ವಿನಾ ಕಾರಣ ನಿರಾಕರಿಸಿದಲ್ಲಿ ನಮ್ಮ ಗಮನಕ್ಕೆ ತನ್ನಿ. ಕ್ರಮ ಕೈಗೊಳ್ಳುತ್ತೇವೆ.
ಅಂತೆಯೇ ಎಲ್ಲ ಶಾಸಕರಲ್ಲಿ ನನ್ನ ಮನವಿ ಇಷ್ಟೆ: ದಯವಿಟ್ಟು ನಿಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡಿ. ತಾಲ್ಲೂಕು ಆಸ್ಪತ್ರೆಗಳಿಗೆ, ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳು ಸರಿಯಿದೆಯೇ ಎಂದು ಪರಿಶೀಲಿಸಿ. ಲೋಪವಾಗಿದ್ದಲ್ಲಿ ನನ್ನ ಗಮನಕ್ಕೆ ತನ್ನಿ, ಸರಿಪಪಡಿಸಲಾಗುವುದು ಎಂದರು.
ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಕೋವಿಡ್ ತಡೆಯುವುದು ಹಾಗೂ ಅಗತ್ಯವುಳ್ಳವರಿಗೆ ಸೂಕ್ತ ಚಿಕಿತ್ಸೆಯನ್ನು ಸಕಾಲದಲ್ಲಿ ಒದಗಿಸಿ, ಜೀವರಕ್ಷಣೆ ಮಾಡುವುದು ಹಾಗೂ ಕೋವಿಡ್ ನಿಯಂತ್ರಿಸುವುದು ನಮ್ಮ ಆದ್ಯತೆ ಆಗಬೇಕು. ಜನರು ಅನಗತ್ಯವಾಗಿ ಬೆಂಗಳೂರಿನಿಂದ ಹಳ್ಳಿಗಳತ್ತ ತೆರಳಬೇಡಿ. ಹಳ್ಳಿಗಳಲ್ಲಿ ಸೋಂಕು ಹಬ್ಬದಂತೆ ಮುನ್ನೆಚ್ಚರಿಕೆ ವಹಿಸಿ.
ನಾವೆಲ್ಲರೂ ಒಟ್ಟಾಗಿ ಕೋವಿಡ್ ನಿಯಂತ್ರಿಸೋಣ. ಇದು ಒಂದೆರಡು ದಿನದ ಹೋರಾಟವಲ್ಲ. ಸತತ ಪ್ರಯತ್ನ, ನಿಮ್ಮೆಲ್ಲರ ಸಹಕಾರ, ಬೆಂಬಲ, ಹಾಗೂ ಸಾಮೂಹಿಕ ಇಚ್ಛಾಶಕ್ತಿಯೊಂದಿಗೆ ಕೋವಿಡ್ ವಿರುದ್ಧ ಜಯಿಸೋಣ ಎಂದರು.
Related Articles
Thank you for your comment. It is awaiting moderation.
Comments (0)