ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಗೆ ತಮಿಳುನಾಡಿನಿಂದ ತಕರಾರು: ಸಿದ್ದರಾಮಯ್ಯ

ಬೆಂಗಳೂರು:ಮೇಕೆದಾಟು ಯೋಜನೆ ಹಿಂದಿನ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ಆದರೂ ಆ ರಾಜ್ಯ ರಾಜಕೀಯ ಉದ್ದೇಶ ಇಟ್ಟುಕೊಂಡು ತಕರಾರು ತೆಗೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಮಾಜಿ ಮುಖ್ಯಮಂತ್ರಿಗಳು, ಕಾನೂನು ತಜ್ಞರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ,ನಮ್ಮ ವ್ಯಾಪ್ತಿಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಯಾವುದೇ ಅಡ್ಡಿ ಇಲ್ಲ. ಸುಪ್ರೀಂಕೋರ್ಟ್ ಹಾಗೂ ನ್ಯಾಯ ಮಂಡಳಿ ಆದೇಶಗಳೂ ನಮಗೆ ಪೂರಕವಾಗಿವೆ. ಯೋಜನೆ ಬೇಡ ಎಂದು ಯಾವ ಅದೇಶವೂ ಹೇಳಿಲ್ಲ. ಯೋಜನೆಗೆ ನಾವು ತಮಿಳುನಾಡಿನ ಒಪ್ಪಿಗೆ ಪಡೆಯುವ ಅವಶ್ಯಕತೆ ಕೂಡ ಇಲ್ಲ.‌ಎಂದರು.

ತಮಿಳುನಾಡಿನ ತಕರಾರಿಗೆ ಯಾವುದೇ ಆಧಾರ, ಸಾಕ್ಷಿ ಇಲ್ಲ. ನ್ಯಾಯ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಆದೇಶಗಳೂ ಸ್ಪಷ್ಟವಾಗಿವೆ. ನಮ್ಮ ಯೋಜನೆ ನ್ಯಾಯಯುತ. ಹೀಗಾಗಿ ನಮ್ಮ ವಕೀಲರು ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮನವೊಲಿಸುವ ಕೆಲಸ ಮಾಡಬೇಕು. ಒಂದು ವೇಳೆ ಕೋರ್ಟ್ ಮಧ್ಯಂತರ ತಡೆ ಆದೇಶ ಕೊಟ್ಟರೆ ಕಷ್ಟವಾಗುತ್ತದೆ. ಆ ರೀತಿ ಆಗದಂತೆ ನೋಡಿಕೊಳ್ಳಬೇಕು. ವಕೀಲರ ತಂಡ ಮುಂಜಾಗ್ರತೆ ವಹಿಸಬೇಕು. ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ತಮಿಳುನಾಡು ಈಗ ಧ್ವನಿ ಎತ್ತಿದೆ. ಇದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದರು.

Related Articles

Comments (0)

Leave a Comment