ಮಂಡ್ಯದಲ್ಲಿ ಅ.10 ರಂದು ರೈತರ ಸಮ್ಮೇಳನ; ಡಿ.ಕೆ ಶಿವಕುಮಾರ
- by Suddi Team
- October 6, 2020
- 12 Views

ಬೆಂಗಳೂರು: ರಾಜ್ಯ ಮಟ್ಟದ ರೈತರ ಸಮ್ಮೇಳನವನ್ನು ಅಕ್ಟೋಬರ್ 10 ರಂದು ಮಂಡ್ಯದಲ್ಲಿ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:
ಎಐಸಿಸಿ ಆದೇಶದಂತೆ ರಾಜ್ಯ ಮಟ್ಟದ ರೈತರ ಸಮ್ಮೇಳನವನ್ನು ದಾವಣಗೆರೆಯಲ್ಲಿ ಮಾಡಲು ನಿರ್ಧರಿಸಿದ್ದೆವು. ಆದರೆ ಚುನಾವಣಾ ಆಯೋಗದ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಆಕ್ಟೊಬರ್ 10ರ ಬೆಳಗ್ಗೆ 11 ಗಂಟೆಗೆ ನಡೆಸಲಾಗುವುದು.
ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ರೈತರನ್ನು ಬಂಡವಾಳಶಾಹಿಗಳ ನಿಯಂತ್ರಣಕ್ಕೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ 25 ರಂದು ಪ್ರತಿಭಟನೆ ಮಾಡಿದ್ದೆವು. ಆಕ್ಟೊಬರ್ 2ರಂದು ಕಿಸಾನ್ ಮಜ್ದೂರ್ ದಿನ ಆಚರಿಸಿ ತಾಲೂಕು ಮಟ್ಟದಲ್ಲೂ ಹೋರಾಟ ಮಾಡಿದ್ದೆವು.
ರೈತರ ಸಮ್ಮೇಳನ ಪಕ್ಷಾತೀತ ಕಾರ್ಯಕ್ರಮ. ಆರು ಜನ ರೈತ ಮುಖಂಡರು ಈ ಸಭೆಯಲ್ಲಿ ಮಾತನಾಡಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಭಾಗವಹಿಸಲಿದ್ದಾರೆ.
ಸಹಿ ಸಂಗ್ರಹ ಅಭಿಯಾನ:
ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ಆರಂಭಿಸುತ್ತಿದ್ದೇವೆ. ನಮ್ಮ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ದೇಶನದಂತೆ 2 ಕೋಟಿ ಸಹಿ ಸಂಗ್ರಹಿಸಲಾಗುವುದು. ಈ ಸಹಿಗಳುಳ್ಳ ಪತ್ರವನ್ನು ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಕಳುಹಿಸುತ್ತೇವೆ. ಅವರು ರಾಷ್ಟ್ರಪತಿ ಅವರಿಗೆ ಸಲ್ಲಿಸಲಿದ್ದಾರೆ. ಈ ರೈತ ವಿರೋಧಿ ಕಾಯ್ದೆಗಳ ರದ್ದತಿಗೆ ಮನವಿ ಮಾಡುತ್ತಾರೆ.
ಈ ಅಭಿಯಾನದಲ್ಲಿ ಎಲ್ಲ ರೈತರು ಹಾಗೂ ಎಲ್ಲ ವರ್ಗದ ಜನ ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ.
ಕೇಂದ್ರ ಸಚಿವರಿಂದಲೇ ರಾಜೀನಾಮೆ:
ಕೇಂದ್ರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಬೇಸತ್ತು ಅಕಾಲಿ ದಳದ ಸಂಸದೆ ಹರ್ಸಿಮ್ರತ್ ಕೌರ್ ಅವರು ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹೇಗೆ ರೈತರ ವಿರುದ್ಧ ನಿಂತಿದೆ ಎಂಬುದಕ್ಕೆ ಇದೇ ಸಾಕ್ಷಿ. ಅಕಾಲಿದಳ ಎನ್ಡಿಎ ಮೈತಿಕೂಟದಿಂದ ಹೊರಬಂದಿದೆ. ರೈತರ ಪರವಾಗಿ ಅವರು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಕೇಂದ್ರದ ಸಚಿವರೊಬ್ಬರು ಪ್ರತಿಭಟನೆ ಮಾಡುವವರು ರೈತರೇ ಅಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ರೈತರೇ ಉತ್ತರ ನೀಡಲಿದ್ದಾರೆ.
ಏನನ್ನೂ ಗೌಪ್ಯವಾಗಿ ಇಡಲು ಸಾಧ್ಯವಿಲ್ಲ:
ರಾಜಕಾರಣದಲ್ಲಿ ನಾವು ಯಾವುದನ್ನೂ ಗೌಪ್ಯವಾಗಿ ಇಡಲು ಸಾಧ್ಯವಿಲ್ಲ. ಡಿ.ಕೆ. ಸುರೇಶ್ ಅವರ ದೆಹಲಿ ನಿವಾಸದಲ್ಲಿ 1.50 ಲಕ್ಷ, ನಮ್ಮ ಮನೆಯಲ್ಲಿ 1.77 ಲಕ್ಷ, ನನ್ನ ಕಚೇರಿಯಲ್ಲಿ 3.50 ಲಕ್ಷ ರೂಪಾಯಿ ಸಿಕ್ಕಿದೆ. ಊರಿನಲ್ಲಿ ನನ್ನ ತಾಯಿಯವರಿಗೆ ಕೇಳಿದಾಗ, ಅವರು ಏನೂ ತೆಗೆದುಕೊಂಡು ಹೋಗಿಲ್ಲ ಅಂದ್ರು. ಬಾಂಬೆಯ ಮನೆಗೆ ನಾನು ಹೋಗಿ 6 ವರ್ಷ ಆಯ್ತು. ದೆಹಲಿಯ ಮನೆಯಲ್ಲಿ ಏನೂ ಇಲ್ಲ. ಕೆಲವು ಕಾಗದ ಪತ್ರ ತೆಗೆದುಕೊಂಡು ಹೋಗಿದ್ದಾರೆ.
ನಮ್ಮ ಸ್ನೇಹಿತರಾದ ಸಚಿನ್ ನಾರಾಯಣ ಅವರ ಮನೆಯಲ್ಲಿ ಅವರ ವ್ಯವಹಾರಕ್ಕೆ ಸಂಬಂಧಿಸಿದ 50 ಲಕ್ಷ ರುಪಾಯಿ ಸಿಕ್ಕಿದೆಯಂತೆ. ಸಚಿನ್ ಅವರ ಜತೆ ಮಾತನಾಡಲು ಅವರು ಇನ್ನು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಧವನಂ ಬಿಲ್ಡರ್ಸ್ ಹತ್ರ ದಾಖಲೆ ಪತ್ರ ತೆಗೆದುಕೊಂಡು ಹೋಗಿದ್ದಾರೆ. ನಿಮಗೆ ಬೇಕು ಎಂದರೆ ಪಂಚನಾಮ ಬಿಡುಗಡೆ ಮಾಡುತ್ತೇವೆ.
ಪ್ರಹ್ಲಾದ್ ಜೋಷಿ ಅವರು ತಮ್ಮ ಪಕ್ಷದವರ ಆಸ್ತಿ ಬಹಿರಂಗ ಪಡಿಸಲಿ:
ಪ್ರಹ್ಲಾದ ಜೋಷಿ ಅವರು ದೊಡ್ಡವರು. ತಮ್ಮ ಮನೆಯನ್ನು ಮೊದಲು ಶುದ್ಧ ಮಾಡಿಕೊಳ್ಳಲಿ. ಅವರು ನಮ್ಮ ಆಸ್ತಿ ಮುಂಚೆ ಎಷ್ಟಿತ್ತು, ಈಗ ಎಷ್ಟಿದೆ ಎಂದು ಕೇಳುವ ಮುನ್ನ ತಮ್ಮ ಪಕ್ಷದ ನಾಯಕರ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಲಿ.
ಈ ದಾಳಿಗಳು ರಾಜಕೀಯ ಪ್ರೇರಿತ ಎಂಬುದನ್ನು ತಿಳಿಯಬೇಕಾದರೆ, ಎಫ್ ಐಆರ್ ಪ್ರತಿ ನೋಡಿ. ಪ್ರಾಥಮಿಕ ತನಿಖೆ ನಡೆದಿದ್ದು ಯಾವಾಗ? ನಾನು ಪಕ್ಷದ ಅಧ್ಯಕ್ಷ ಆಗಿದ್ದು ಯಾವಾಗ? ಎಫ್ ಐಆರ್ ದಾಖಲಿಸಿದ್ದು ಯಾವಾಗ? ಎಂಬುದನ್ನು ನೋಡಿ. ಆಗ ಸ್ಪಷ್ಟವಾಗಿ ತಿಳಿಯುತ್ತದೆ.
Related Articles
Thank you for your comment. It is awaiting moderation.
Comments (0)