ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ: ಸ್ಥಳ ಪರಿಶೀಲಿಸಿದ ಡಿಸಿಎಂ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದ 23 ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಭವ್ಯ ಪ್ರತಿಮೆ ಹಾಗೂ ಸೆಂಟ್ರಲ್‌ ಪಾರ್ಕ್ ನಿರ್ಮಾಣಕ್ಕೆ ಇದೇ 27ರಂದು ಭೂಮಿಪೂಜೆ ನಡೆಯಲಿದ್ದು, ಅದಕ್ಕೆ ಪೂವಭಾವಿಯಾಗಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉನ್ನತ ಅಧಿಕಾರಿಗಳೊಂದಿಗೆ ಸ್ಥಳದಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಅವರು, ಕಾರ್ಯಕ್ರಮವು ಗೊಂದಲ ಇಲ್ಲದೆ ಸರಳವಾಗಿ, ಅರ್ಥಪೂರ್ಣವಾಗಿ ನಡೆಯಬೇಕು. ಹೆಚ್ಚುಜನ ಸೇರಲು ಅವಕಾಶ ನೀಡಬಾರದು. ಕೋವಿಡ್‌ 19 ಇರುವ ಕಾರಣದಿಂದ ಹೆಚ್ಚು ಎಚ್ಚರಿಕೆ ವಹಿಸಬೇಕು. ಸರಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್‌, ಡಿಸಿಎಂ ಕಾರ್ಯದರ್ಶಿ ಪ್ರದೀಪ್‌ ಪ್ರಭಾಕರ್‌, ಉದ್ಯಮಿ ಪ್ರಶಾಂತ ಪ್ರಕಾಶ ಹಾಗೂ ವಿಮಾನ ನಿಲ್ಧಾಣದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ನಮ್ಮ ರಾಜ್ಯದ ಮಟ್ಟಿಗೆ ಮಾತ್ರವಲ್ಲ, ಇಡೀ ದೇಶದಲ್ಲಿಯೇ ಇದೊಂದು ಅಪರೂಪದ ಸ್ಮಾರಕವಾಗಲಿದ್ದು, ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ನಮ್ಮ ರಾಜ್ಯದ ಭವ್ಯ ಪರಂಪರೆಯನ್ನು ಸಾರಿ ಹೇಳುವ ರೀತಿಯಲ್ಲಿ ಇರುತ್ತದೆ. ವಿಶಾಲವಾದ ಉದ್ಯಾನವನದಲ್ಲಿ ನಮ್ಮ ನಾಡಪ್ರಭುಗಳ ಪ್ರತಿಮೆ ವಿರಾಮಜಮಾನವಾಗಿ ಕಾಣುವಂತೆ ಯೋಜನೆ ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.
ಇದೇ 27ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರತಿಮೆ‌ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಿದ್ದಾರೆ ಎಂದರು.

Related Articles

Comments (0)

Leave a Comment