ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರಿನಲ್ಲಿ ಪಾರಂಪರಿಕ ಕೇಂದ್ರ ಸ್ಥಾಪನೆಗೆ ಆದ್ಯತೆ- ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
- by Suddi Team
- June 12, 2020
- 120 Views
ಬೆಂಗಳೂರು, ಜೂನ್ 12-ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗೂ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಕೋವಿಡ್ 19 ರ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ 16,095 ಕಲಾವಿದರು, ಸಾಹಿತಿಗಳಿಗೆ ತಲಾ ಎರಡು ಸಾವಿರ ರೂ. ಗಳಂತೆ ಒಟ್ಟು 3.21 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರವಾಸೋದ್ಯಮ:
ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿಗಳು ಸಿದ್ಧವಾಗಿವೆ. ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಪ್ರವಾಸೋದ್ಯಮ ವಲಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದ್ದು, 3 ಲಕ್ಷ ಉದ್ಯೋಗ ಅಪಾಯದ ಅಂಚಿನಲ್ಲಿದೆ. ಕೆ.ಎಸ್.ಟಿ.ಡಿ.ಸಿ. ಸಂಸ್ಥೆ ಹಾಗೂ ಜಂಗಲ್ ಲಾಡ್ಜಸ್ ಸಂಸ್ಥೆಗೆ ಕ್ರಮವಾಗಿ 14 ಕೋಟಿ ರೂ. ಹಾಗೂ 15 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕೋವಿಡ್ 19ರ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಸಿಲುಕಿಕೊಂಡ 6780 ವಿದೇಶಿ ಪ್ರವಾಸಿಗರನ್ನು ಸ್ವದೇಶಗಳಿಗೆ ಹಿಂತಿರುಗಲು ಸಮನ್ವಯ ಸಾಧಿಸಲಾಗಿದ್ದು, ಈ ಬಗ್ಗೆ ಪ್ರವಾಸಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆಯಾಗಿ ಕಳೆದ ಆರ್ಥಿಕ ವರ್ಷದಲ್ಲಿ ಕೆಎಸ್ ಟಿಡಿಸಿ ಕಳೆದ 12 ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 6.23 ಕೋಟಿ ಲಾಭ ಪಡೆದಿದೆ. ಅಂತೆಯೇ ಜಂಗಲ್ ಲಾಡ್ಜಸ್ 7.86 ಕೋಟಿ ಲಾಭ ಪಡೆದಿದೆ.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪ್ರವಾಸೋದ್ಯಮ ಸಚಿವ ಸಿ..ಟಿ. ರವಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Related Articles
Thank you for your comment. It is awaiting moderation.


Comments (0)