ಸಮಾವೇಶ ನಡೆಸಿ ಏನನ್ನು ಸಾಧಿಸುತ್ತೀರಿ: ಸುನೀಲ್ ಕುಮಾರ್ ಪ್ರಶ್ನೆ
- by Suddi Team
- May 19, 2025
- 19 Views

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ಈಗ “ಬೆಂಗಳೂರು- ಮೈಸೂರಿಗೆ” ಮಾತ್ರ ಸೀಮಿತವಾಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಇಂಥ ಸಂದರ್ಭದಲ್ಲಿ ಸಮಾವೇಶ ನಡೆಸಿ ಏನನ್ನು ಸಾಧಿಸುತ್ತೀರಿ ? ಎಂದು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಬಳ್ಳಾರಿಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡಲು ಹೊರಟ ಕಾಂಗ್ರೆಸ್ ಸರ್ಕಾರದಲ್ಲಿ ” ಪ್ರೇತಕಳೆ” ರಾರಾಜಿಸುತ್ತಿದೆ. ಮಂತ್ರಿ ಮಂಡಲದ ಸಚಿವರ ಮೊಗದಲ್ಲಿ ಕಿಂಚಿತ್ ಕಳೆಯಿಲ್ಲ. ಪಟ್ಟ ಬಿಟ್ಟುಕೊಡಬೇಕಾದ ” due date ” ಹತ್ತಿರ ಬಂತಲ್ಲ ಎಂಬ ಸೂತಕ, ಸಂಭ್ರಮಕ್ಕಿಂತಲೂ ಭಯಂಕರವಾಗಿ ಕಾಡುತ್ತಿದೆ. ಸಾಧನಾ ಸಮಾವೇಶದ ಬೆನ್ನಲ್ಲೇ ಸರ್ಕಾರದ ” ಕರಿಮಣಿ ಮಾಲೀಕತ್ವ” ಕ್ಕಾಗಿ ಭೀಕರ ಕದನ ನಡೆಯಲಿದೆ ಎಂಬ ಚರ್ಚೆ ಕಾಂಗ್ರೆಸ್ ನ ಆಂತರಿಕ ವಲಯದಲ್ಲಿ ದಟ್ಟವಾಗಿದ್ದು “ಕೊರಳಿಗೆ ಬೆರಳು” ಬೀಳುವ ದಿನ ಹತ್ತಿರವಾಗುತ್ತಿದೆ. ಆದಾಗಿಯೂ ಎರಡು ವರ್ಷದಲ್ಲಿ ನಯ್ಯಾಪೈಸೆಯಷ್ಟೂ ಜನಪರ ಕೆಲಸ ಮಾಡದ ಈ “ದಂಡಪಿಂಡ” ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ಜನಾದೇಶದ ಕ್ರೂರ ವ್ಯಂಗ್ಯವಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಅಷ್ಟಕ್ಕೂ ಸಿದ್ದರಾಮಯ್ಯನವರೇ ನೀವು ಈ ರೀತಿ ಸಂಭ್ರಮಿಸುವುದಾದರೂ ಏಕೆ ? ಎಂದು ಸಿಎಂ ಮುಂದೆ ಸರಣಿ ಪ್ರಶ್ನೆ ಇಟ್ಟಿದ್ದಾರೆ.
– ಅಭಿವೃದ್ಧಿ ನಿಧಿಯನ್ನು ಸಕಾಲಕ್ಕೆ ಬಿಡುಗಡೆ ಮಾಡದೇ ರಾಜ್ಯದ ಬೆಳವಣಿಗೆಯ ದರವನ್ನು ಹತ್ತು ವರ್ಷ ಹಿಂದೆ ತಳ್ಳಿದಕ್ಕಾಗಿಯೇ ?
– ಮರಣ ಪ್ರಮಾಣ ಪತ್ರದಿಂದ ಮೊದಲ್ಗೊಂಡು ಎಲ್ಲ ಸರ್ಕಾರಿ ಸೇವೆಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿದಕ್ಕಾಗಿಯೇ ?
– ಕೇಂದ್ರ ಸರ್ಕಾರದ ಜತೆ ಕಾಲು ಕೆದರಿ ಜಗಳಕ್ಕೆ ನಿಂತು ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳನ್ನು ಹಳ್ಳಹಿಡಿಸಿದಕ್ಕಾಗಿಯೇ ?
– ರಾಜ್ಯವನ್ನು ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ತುಂಡು ಮಾಡುತ್ತಿರುವುದಕ್ಕಾಗಿಯೇ ?
– ಸರ್ವ ಜನಾಂಗದ ಶಾಂತಿಯ ತೋಟದ ಹೆಸರಿನಲ್ಲಿ ಹಿಂದು ಕಾರ್ಯಕರ್ತರ ರಕ್ತತರ್ಪಣ ಕೊಡುತ್ತಿರುವುದಕ್ಕಾಗಿಯೇ ?
– ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಹಾಕಿದವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದಕ್ಕಾಗಿಯೇ ?
– ಜಾತಿ ಗಣತಿ ವರದಿಯಲ್ಲಿ ಪ್ರವರ್ಗ ಪರಿಷ್ಕರಣೆ ಮಾಡಿ ಹಿಂದುಳಿದ ವರ್ಗದ ಒಗ್ಗಟ್ಟು ಒಡೆದಿದ್ದಕ್ಕಾಗಿಯೇ ?
– ದಲಿತರ ಮೀಸಲು ವರ್ಗೀಕರಣ ವಿಚಾರವನ್ನು ಇನ್ನಷ್ಟು ಜಟಿಲಗೊಳಿಸಿದಕ್ಕಾಗಿಯೇ?
– ಲೋಕಾಯುಕ್ತ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ನುಂಗಿ- ನೀರು ಕುಡಿದಿದಕ್ಕಾಗಿಯೇ ?
– ಬೆಂಗಳೂರಿನ ಮೂಲ ಸೌಕರ್ಯ ವ್ಯವಸ್ಥೆಯನ್ನು ಸುರಂಗ ಮಾರ್ಗದಲ್ಲಿ ಸಮಾಧಿ ಮಾಡಿದಕ್ಕಾಗಿಯೇ ?
– ಭ್ರಷ್ಟಾಚಾರವನ್ನು ಶೇ100ಕ್ಕೆ ಹೆಚ್ಚಿಸಿದಕ್ಕಾಗಿಯೇ ?
– ಎಸ್ ಸಿಎಸ್ ಪಿ, ಟಿಎಸ್ ಪಿ ಹಣವನ್ನು ದುರ್ಬಳಕೆ ಮಾಡಿಕೊಂಡಿದಕ್ಕಾಗಿಯೇ ? ಎನ್ನುವ ಪ್ರಶ್ನೆ ಇಟ್ಟಿದ್ದಾರೆ.
ಸಂವಿಧಾನ ಬಾಹಿರವಾಗಿ ಮುಸ್ಲಿಂರಿಗೆ ಸರ್ಕಾರಿ ಗುತ್ತಿಗೆ ಹಾಗೂ ಪೂರೈಕೆಯಲ್ಲಿ ಮೀಸಲು ಕಲ್ಪಿಸಿದಕ್ಕಾಗಿಯೇ ?
ಮುಡಾ ಪ್ರಕರಣದ ಬಳಿಕ ಬೆಂಗಳೂರು ಬಿಟ್ಟು ರಾಜ್ಯ ಪ್ರವಾಸ ಮಾಡುವುದಕ್ಕೆ ಅಂಜುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ಈಗ “ಬೆಂಗಳೂರು- ಮೈಸೂರಿಗೆ” ಮಾತ್ರ ಸೀಮಿತವಾಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಇಂಥ ಸಂದರ್ಭದಲ್ಲಿ ಸಮಾವೇಶ ನಡೆಸಿ ಏನನ್ನು ಸಾಧಿಸುತ್ತೀರಿ ?ಎಂದು ವಿ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
Related Articles
Thank you for your comment. It is awaiting moderation.
Comments (0)