ಭದ್ರಾ ಮೇಲ್ದಂಡೆ ಯೋಜನೆ; ಅನುದಾನ ನೀಡುವಂತೆ ಜಲಶಕ್ತಿ ಸಚಿವರಿಗೆ ಮನವಿ

ನವದೆಹಲಿ: ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರ ತನ್ನ ಘೋಷಣೆಯಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಬೇಕು ಎಂದು ಮನವಿ ಸಲ್ಲಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯು ಮಧ್ಯ ಕರ್ನಾಟಕ ಭಾಗದ ಅತಿ ದೊಡ್ಡ ಏತ ನೀರಾವರಿಯಾಗಿದೆ. ಈ ಯೋಜನೆ ಮೂಲಕ 29.90 ಟಿಎಂಸಿ ನೀರನ್ನು ಸಣ್ಣ ನೀರಾವರಿ ಯೋಜನೆ ಮೂಲಕ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆಯ 2,25,515 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲಾಗುವುದು. ಜತೆಗೆ, ಬರಪೀಡಿತ ತಾಲೂಕುಗಳ 367 ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ಮರುಪೂರಣಕ್ಕೆ ನೆರವಾಗಲಿದೆ. ಈ ಯೋಜನೆ ಜಾರಿಗೆ ಪರಿಷ್ಕತ ಅಂದಾಜು ಮೊತ್ತ 21,473 ರೂ. ಕೋಟಿ ಆಗಿದೆ. ಈ ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಸಲಹಾ ಸಮಿತಿಯು ಒಪ್ಪಿಗೆ ನೀಡಿದೆ. ಇನ್ನು ಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್ ನಲ್ಲಿ ಈ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಿತ್ತು. ಹೀಗಾಗಿ, ಪಿಎಂಕೆಎಸ್ ವೈ-ಎಐಬಿಪಿ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸಲು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡುವಂತೆ ಶಿವಕುಮಾರ್ ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ.

Related Articles

Comments (0)

Leave a Comment