ಹಾಸಿಗೆ ಕೊಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕಿಣ್ಯ ಕ್ರಮ: ಡಿಸಿಎಂ ಎಚ್ಚರಿಕೆ
- by Suddi Team
- July 11, 2020
- 9 Views

ಬೆಂಗಳೂರು: ತಮ್ಮಲ್ಲಿರುವ ಒಟ್ಟು ಹಾಸಿಗೆಗಳ ಪೈಕಿ ಶೇಕಡಾ 50 ರಷ್ಟನ್ನು ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ನಗರದ ಕೋವಿಡ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರನಲ್ಲಿ ಶನಿವಾರ ಪಶ್ಚಿಮ ವಲಯದ ಶಾಸಕರು, ಬಿಬಿಎಂಪಿ ಸದಸ್ಯರು ಮತ್ತು ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲ ಖಾಸಗಿ ಆಸ್ಪತ್ರೆಗಳು ಸರಕಾರದ ಸೂಚನೆಗಳನ್ನು ಪಾಲಿಸದಿರುವುದು ಮತ್ತು ಕೋವಿಡ್ ಬಗ್ಗೆ ನಿರ್ಲಕ್ಷ್ಯ ತಾಳಿರುವುದು ಕಂಡು ಬಂದಿದೆ. ಅಂತಹ ಆಸ್ಪತ್ರೆಗಳು ಕಾನೂನು ಕ್ರಮ ಎದುರಿಸುವುದು ಖಚಿತ ಎಂದರು.
ಕೋವಿಡ್ ಹಾಗೂ ಕೋವಿಡ್ ಹೊರತಾದ ರೋಗಿಗಳಿಗೆ ಸಮಾನ ಮಹತ್ವ ಕೊಟ್ಟು ಚಿಕಿತ್ಸೆ ನೀಡಬೇಕು. ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಈ ಕೂಡಲೇ ಅವರು ಎಚ್ಚಿತ್ತುಕೊಳ್ಳದಿದ್ದರೆ ಅಂತಹ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ವ್ಯಾಪ್ತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೋವಿಡ್ ಅನಿರೀಕ್ಷಿತವಾಗಿ ರಾಜ್ಯದ ಮೇಲರಗಿದ ಸಾಂಕ್ರಾಮಿಕ ಪೀಡೆ. ಇದನ್ನು ಯುದ್ಧೋಪಾದಿಯಲ್ಲಿ ಎದುರಿಸಲು ಪ್ರತಿಯೊಬ್ಬರು ಸರಕಾರದ ಜತೆ ಕೈಜೋಡಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ಸರಿಯಲ್ಲ ಎಂದ ಅವರು, ಜನರಿಗಿಂತ ಯಾರೂ ಹೆಚ್ಚಲ್ಲ ಎಂಬ ಸಂಗತಿಯನ್ನು ಮರೆಯಬಾರದು. ಎಲ್ಲರೂ ಯೋಧರಂತೆ ಕೆಲಸ ಮಾಡಬೇಕು ಎಂದು ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ಕಿವಿಮಾತು ಹೇಳಿದರು.
ಪಶ್ಚಿಮದಲ್ಲಿ ಕಾಲ್ ಸೆಂಟರ್:
ಪಶ್ಚಿಮ ವಿಭಾಗದಲ್ಲಿ ಕೋವಿಡ್ ಬಗ್ಗೆ ಸಮಗ್ರ ಮಾಹಿತಿಯನ್ನು ಕೊಡುವ ಹಾಗೂ ಆಸ್ಪತ್ರೆ, ಕೋವಿಡ್ ಕೇರ್ ಕೇಂದ್ರಗಳು, ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರ ನಡುವೆ ನೇರ ಸಂಪರ್ಕ ಸೇತುವೆಯಾಗಿ ದಿನದ 24 ಗಂಟೆ ಕೆಲಸ ಮಾಡುವ ಕಾಲ್ ಸೆಂಟರ್ ಒಂದನ್ನು ತೆರೆಯಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.
ಇದರಿಂದ ಈ ವಿಭಾಗದ ಎಲ್ಲ ಮಾಹಿತಿ ಅಂಗೈನಲ್ಲೇ ಇರುತ್ತದೆ. ಸೋಂಕಿತರ ಪರೀಕ್ಷೆ, ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು, ಕ್ವಾರಂಟೈನ್, ಹೋಮ್ ಕೇರ್ ಸೇರಿ ಎಲ್ಲ ಸಂಗತಿಗಳ ಬಗ್ಗೆ ಇಲ್ಲಿ ಮಾಹಿತಿ ಲಭ್ಯವಾಗುತ್ತದೆ ಎಂದರು ಅವರು.
ಲಾಕ್ ಡೌನ್ ಬಗ್ಗೆ ಚರ್ಚೆ ಇಲ್ಲ:
ಈ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಯಾವುದೇ ಚರ್ಚೆ ನಡೆಯಲಿಲ್ಲ. ಬದಲಿಗೆ ಇರುವ ವ್ಯವಸ್ಥೆಯನ್ನೇ ಮತ್ತಷ್ಟು ಉತ್ತಮಪಡಿಸುವುದು, ಜನರಿಗೆ ಹೆಚ್ಚು ಅನುಕೂಲ ಮಾಡಿಕೊಡುವುದು ಹೇಗೆ ಎಂಬ ಬಗ್ಗೆ ಮಾತುಕತೆ ನಡೆಯಿತು. ಆ ಬಗ್ಗೆ ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಕೆ. ಗೋಪಾಲಯ್ಯ ಸೇರಿದಂತೆ ಎಲ್ಲ ಶಾಸಕರು ಮತ್ತು ಪಾಲಿಕೆ ಸದಸ್ಯರು ಸಲಹೆಗಳನ್ನು ನೀಡಿದರು. ವೀಕೆಂಡ್ ಲಾಕ್ ಡೌನ್ ಬಗ್ಗೆಯೂ ಚರ್ಚೆ ಆಗಲಿಲ್ಲ. ಈಗಲೂ ಶನಿವಾರ ಸಂಜೆಯಿಂದ ಸೋಮವಾರ ಮುಂಜಾನೆವರೆಗೆ ಕರ್ಫ್ಯೂ ಜಾರಿಯಲ್ಲಿದೆ. ಜತೆಗೆ, ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಇದೆ. ಮುಂದಿನ ದಿನಗಳ ಸ್ಥಿತಿಗತಿ ಹಾಗೂ ಸೋಂಕಿತರ ಪ್ರಮಾಣ ನೋಡಿಕೊಂಡು ಆ ಬಗ್ಗೆ ಮುಖ್ಯಮಂತ್ರಿಗಳೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಸೋಂಕು ನಿವಾರಣೆಗೆ ಲಾಕ್ ಡೌನ್ ಉತ್ತಮ ಪರಿಹಾರ ಎನ್ನುವುದರಲ್ಲಿ ಅನುಮಾನ ಇಲ್ಲ. ಆದರೆ ತದನಂತರದ ಸವಾಲುಗಳು ಜಾಸ್ತಿ. ಜೀವದ ಜತೆಗೆ ಜೀವನೋಪಾಯವೂ ಮುಖ್ಯ. ಸದ್ಯಕ್ಕೆ ವೈರಸ್ ತೀವ್ರತೆ ಕಡಿಮೆಯಾಗಿದೆ. ಅದನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು
ಸ್ಥಳೀಯ ಆಸ್ಪತ್ರೆಗಳ ಬಳಕೆ:
ಹಾಸಿಗೆಳ ಕೊರತೆ ಉಂಟಾದರೆ ಸ್ಥಳೀಯವಾಗಿ ಇರುವ ಸಣ್ಣಪುಟ್ಟ ಆಸ್ಪತ್ರೆಗಳ ಹಾಸಿಗೆಗಳನ್ನು ಸರಕಾರದ ವಶಕ್ಕೆ ಪಡೆಯಬಾರದೇಕೆ ಎಂದು ಗೋಪಾಲಯ್ಯ ಅವರು ಸಲಹೆ ನೀಡಿದರು. ಒಂದು ವಾರ ಪರಿಸ್ಥಿತಿಯನ್ನು ನೋಡಿಕೊಂಡು ಆ ಬಗ್ಗೆ ತೀರ್ಮಾನ ಮಾಡುತ್ತೇವೆ. ಇದರ ಜತೆಗೆ, ಈ ವಿಭಾಗದಲ್ಲಿ ದಿನವಹಿ ನಡೆಸುವ ಪರೀಕ್ಷೆಗಳ ಪ್ರಮಾಣವನ್ನು ಹೆಚ್ಚಿಸಿ ಆದಷ್ಟು ಬೇಗ ರಿಸಲ್ಟ್ ಸಿಗುವಂತೆ ನೋಡಿಕೊಳ್ಳಲಾಗುವುದು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟ್ರೂನ್ಯಾಟ್ ಯಂತ್ರಗಳನ್ನು ಅಳವಡಿಸಿ, ಸ್ಯಾಂಪಲ್ ಪಡೆದ ಅರ್ಧ ಗಂಟೆಯೊಳಗೆ ವರದಿ ಸಿಗುವಂತೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ವೈದ್ಯರ ಕೊರತೆ ನಿವಾರಣೆಗೆ ಕ್ರಮ:
ನಗರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ನರ್ಸುಗಳು ಹಾಗೂ ವೈದ್ಯಕೀಯ ಸಹಾಯಕ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಸರಕಾರ ಸಿಬ್ಬಂದಿ ಕೊರತೆ ಇದ್ದ ಕಡೆ ಖಾಸಗಿ ಆಸ್ಪತ್ರೆಯ ವೈದ್ಯರು, ನರ್ಸುಗಳು ಮತ್ತಿತರೆ ಸಿಬ್ಬಂದಿಯನ್ನು ಎರವಲು ಪಡೆಯಲಾಗುತ್ತಿದೆ. ಈಗಾಗಲೇ ಸರಕಾರಿ, ಖಾಸಗಿ ವೈದ್ಯಕೀಯ ಕಾಲೇಜುಗಳ ನೆರವು ಕೋರಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರಲ್ಲದೆ, ಮೃತದೇಹಗಳ ವೈಜ್ಞಾನಿಕ ಮತ್ತು ಸುರಕ್ಷಿತ ವಿಲೇವಾರಿಗೆ ಎಲ್ಲ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಮೃತರ ಕುಟುಂಬಕ್ಕೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ಹಣ ಬಳಕೆ ಅವಕಾಶ:
ಕೋವಿಡ್ ಹಿನ್ನಲೆಯಲ್ಲಿ ಎಲ್ಲೂ ಹಣಕಾಸು ಕೊರತೆ ಆಗದಂತೆ ಎಚ್ಚರ ವಹಿಸಲಾಗಿದೆ. ಅಕಸ್ಮಾತ್ ಕೊರತೆ ಉಂಟಾದರೆ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಾದ ಹಣವನ್ನು ಬಳಸುವಂತೆ ಎಲ್ಲ ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನರಿಗೆ ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನು ಸರಕಾರ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸೆ:
ಇದೇ ವೇಳೇ ಕೋವಿಡ್ ರಹಿತ ರೋಗಿಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡಬೇಕೆಂದು ಎಲ್ಲ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಪ್ರತಿ ಉಪ ವಿಭಾಗದಲ್ಲಿಯೂ ಬಿಬಿಎಂಪಿ ಆಸ್ಪತ್ರೆಗಳು ಹಾಗೂ ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಜತೆಗೆ ಎಲ್ಲ ವಾರ್ಡುಗಳಲ್ಲಿ ಫೀವರ್ ಕ್ಲಿನಿಕ್ ಗಳಿಗೆ ಪರ್ಯಾಯವಾಗಿ ತುರ್ತು ಕ್ಲಿನಿಕ್ ಗಳನ್ನು ತೆರೆಯಲಾಗುತ್ತಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.
ಸಚಿವ ಗೋಪಾಲಯ್ಯ, ಶಾಸಕ ಜಮೀರ್ ಅಹಮದ್, ಐಎಎಸ್ ಅಧಿಕಾರಿ ಹಾಗೂ ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿ ಉಜ್ವಲ್ ಕುಮಾರ್ ಘೋಷ್, ಪಾಲಿಕೆಯ ವಿಶೇಷ ಆಯುಕ್ತ ಬಸವರಾಜು, ಜಂಟಿ ಆಯುಕ್ತ ಚಿದಾನಂದ ಮುಂತಾದವರು ಸಭೆಯಲ್ಲಿ ಹಾಜರಿದ್ದರು.
Related Articles
Thank you for your comment. It is awaiting moderation.
Comments (0)