ರಾಜ್ಯದ ಜಲಾಶಯಗಳ ಒಳ ಹರಿವು ಹೆಚ್ಚಳ: ಸಾಧ್ಯವಾದಷ್ಟು ಕೆರೆಗಳ ಭರ್ತಿಗೆ ಕ್ರಮ: ಡಿಕೆಶಿ
- by Suddi Team
- August 18, 2018
- 209 Views

ಬೆಂಗಳೂರು: ರಾಜ್ಯದ ಜಲಾಶಯಗಳಿಗೆ ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಕಾಲುವೆಗಳನ್ನು ದುರಸ್ಥಿ ಮಾಡಿ ಕೆರೆಗಳನ್ನು ತುಂಬಿಸಲು ಆದೇಶಿಸಿದ್ದೇವೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕೆಆರ್ ಎಸ್, ಕಬಿನಿ ಹಾಗೂ ಹೇಮಾವತಿ ತುಂಗಭದ್ರಾ ಭಾಗದ ಅಣೆಕಟ್ಟಗಳಲ್ಲಿ ಸಣ್ಣ ಪುಟ್ಟ ಬಿರುಕುಗಳು ಉಂಟಾಗಿವೆ. ಭಾರಿ ನೀರು ಒಳಹರಿವು ಉಂಟಾಗಿರುವ ಕಾರಣ ಒತ್ತಡ ಹೆಚ್ಚಿದೆ. ಹಾಗಾಗಿ ಹೊರ ಹರಿವು ಹೆಚ್ಚಳ ಮಾಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು, ಅಣೆಕಟ್ಟೆ ಬಳಿ ಅಧಿಕಾರಿಗಳ ಗಸ್ತು ಹೆಚ್ಚಿಸಲು ಉದ್ದೇಶಿಸಿದ್ದೇವೆ ಎಂದು ಮಾಹಿತಿ ನೀಡಿದರು.
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿವೃಷ್ಟಿ ಅನಾಹುತಗಳಾಗಿವೆ. ಅಲ್ಲೆಲ್ಲಾ ನೀರಾವರಿ ಇಲಾಖೆಯ ಇಂಜಿನಿಯರ್ ಗಳು ಮತ್ತು ಗುತ್ತಿಗೆದಾರರಿಗೆ ನೆರವು ನೀಡುವಂತೆ ಆದೇಶಿಸಿದ್ದೇವೆ. ನೀರಾವರಿ ಇಲಾಖೆಯ ಗುತ್ತಿಗೆದಾರರ ಯಂತ್ರೋಪಕರಣಗಳನ್ನು ಬಳಕೆ ಮಾಡಿಕೊಂಡು ರಸ್ತೆ ಕ್ಲಿಯರ್ ಮಾಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ನೆರೆ ಪರಿಹಾರಕ್ಕೆ ಬೆಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಗಾರ್ಮೆಂಟ್ ಕಾರ್ಖಾನೆಗಳಲ್ಲಿ ಲಭ್ಯ ಇರುವ ಸೆಕೆಂಡ್ಸ್ ಬಟ್ಟೆಗಳನ್ನು ಕಳುಹಿಸಲು ಹಾಗೂ ರಾಮನಗರ ಜಿಲ್ಲಾ ಪಂಚಾಯ್ತಿ ಮತ್ತು ಜಿಲ್ಲಾಧಿಕಾರಿ ಕಚೇರಿಗೂ ನೆರೆ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿಕೊಡಲು ಉದ್ಯಮಿಗಳು ಮತ್ತು ಶಾಸಕರಿಗೆ ಮನವಿ ಮಾಡಿದ್ದೇವೆ. ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರ ತಂಡವನ್ನು ನೆರೆ ಪೀಡಿತ ಪ್ರದೇಶಗಳಿಗೆ ಕಳುಹಿಸಲು, ಔಷಧ ನೆರವು ನೀಡಲು ಸಹ ಮನವಿ ಮಾಡಿದ್ದೇವೆ ಎಂದರು.
ಇದೇ ವೇಳೆ ಮಾತನಾಡಿದ ಅವರು, ಮಹಾದಾಯಿ ವಿವಾದ ಕುರಿತಂತೆ ಮೇಲ್ಮನವಿ ಸಲ್ಲಿಸುವುದು ನಿಶ್ಚಿತ. ಈ ಸಂಬಂಧ ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಲಾಗುತ್ತಿದೆ. ನಮ್ಮ ನೀರಿನ ಹಕ್ಕು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದರು.
Related Articles
Thank you for your comment. It is awaiting moderation.
Comments (0)