ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದ ಕೋವಿಡ್ ಆರೈಕೆ ಕೇಂದ್ರಕ್ಕೆ ಸಿದ್ದರಾಮಯ್ಯ ಭೇಟಿ: ವ್ಯವಸ್ಥೆ ಬಗ್ಗೆ ಪರಿಶೀಲನೆ
- by Suddi Team
- July 21, 2020
- 15 Views

ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭಿಸುತ್ತಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೇ ಆ ಕುರಿತು ಗಮನ ಹರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಏಷ್ಯಾದಲ್ಲೇ ಅತಿದೊಡ್ಡ ಕೋವಿಡ್ ಆರೈಕೆ ಕೇಂದ್ರ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಹೇಳಿದ್ದರು. ಹೀಗಾಗಿ ಇಲ್ಲಿಯ ವ್ಯವಸ್ಥೆ ಹೇಗಿದೆ ಎಂಬುದನ್ನು ನೋಡಲು ಬಂದಿದ್ದೆ. ಶುಕ್ರವಾರದಿಂದ ಇಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಸೋಂಕಿನ ಲಕ್ಷಣ ಇಲ್ಲದವರನ್ನು ದಾಖಲು ಮಾಡಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಇಂಥ ಸೌಲಭ್ಯದಲ್ಲಿ ಸರ್ಕಾರ ಪರಿಸ್ಥಿತಿಯನ್ನು ಯಾವ ರೀತಿ ನಿಭಾಯಿಸುವುದೋ ಕಾದು ನೋಡಬೇಕಿದೆ ಎಂದು ವಿಪಕ್ಷ ನಾಯಕರು ಹೇಳಿದರು.
ಮಾಧ್ಯಮ ಪ್ರತಿನಿಧಿಗಳಿಗೆ ಅವರು ಹೇಳಿದ್ದಿಷ್ಟು :
ಬೆಡ್ ಕೊರತೆಯಿಂದ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಬೆಡ್ಗಳಿಗೆ ಅಲೆದಾಟ, ಚಿಕಿತ್ಸೆಗೆ ಪರದಾಟ ಎಂಬ ಸುದ್ದಿಗಳನ್ನು ನೋಡುತ್ತಿದ್ದೇವೆ. ಜುಲೈ, ಆಗಸ್ಟ್ ತಿಂಗಳಲ್ಲಿ ಸೋಂಕು ಉಲ್ಬಣಿಸಲಿದೆ ಎಂದು ತಜ್ಞರು ಮೊದಲೇ ಹೇಳಿದ್ದರು. ಲಾಕ್ಡೌನ್ ಅವಧಿಯಲ್ಲೇ ಇದಕ್ಕೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆಗ ಸರ್ಕಾರಕ್ಕೆ ಸಮಯ ಇರಲಿಲ್ಲ.
ಈ ಕೇಂದ್ರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಬೆಡ್ಗಳಿವೆ. 2 ಸಾವಿರಕ್ಕೂ ಹೆಚ್ಚು ವೈದ್ಯರು, ಅರೆ ವೈದ್ಯ ಸಿಬ್ಬಂದಿ ನೇಮಕವಾಗಬೇಕು. ಇನ್ನೂ ನೇಮಕ ಪ್ರಕ್ರಿಯೆ ನಡೆಯುತ್ತಲೇ ಇದೆ. ಶುಕ್ರವಾರದಿಂದ ಸೋಂಕಿತರ ದಾಖಲಾತಿ ಆರಂಭವಾಗುತ್ತದೆ. ವೈದ್ಯರೇ ಇಲ್ಲ ಎಂದರೆ ಹೇಗೆ ?
ಹಾಸಿಗೆ, ದಿಂಬು, ಬೆಡ್ಶೀಟ್ ಒದಗಿಸುವ ಗುತ್ತಿಗೆದಾರರ ಸಮಸ್ಯೆಯೇ ಇನ್ನೂ ಇತ್ಯರ್ಥವಾಗಿಲ್ಲ. 800 ರೂ. ಪ್ರಕಾರ ಬಾಡಿಗೆಗೆ ಪಡೆಯುವುದಾಗಿ ಸರ್ಕಾರ ಹೇಳಿತ್ತು. ಸಾರ್ವಜನಿಕವಾಗಿ ಟೀಕೆಗಳು ಬಂದ ಬಳಿಕ ಈಗ ಸರ್ಕಾರವೇ ಖರೀದಿ ಮಾಡುತ್ತಿದೆ. ಅದೂ ಇತ್ಯರ್ಥವಾಗಿಲ್ಲ. ಬಾಡಿಗೆಯೋ, ಖರೀದಿಯೋ ಎಂಬುದು ಮೊದಲು ಇತ್ಯರ್ಥವಾಗಬೇಕು.
ಕೇಂದ್ರದಲ್ಲಿ ಶೌಚಾಲಯಗಳು ದೂರ ಇವೆ. ವಯಸ್ಸಾದವರು ಹೋಗಿ ಬರಲು ಕಷ್ಟ. ಒಳಚರಂಡಿ ವ್ಯವಸ್ಥೆ ಸಹ ಸರಿಯಾಗಿಲ್ಲ. ತಾತ್ಕಾಲಿಕ ವ್ಯವಸ್ಥೆಯೇನೋ ಮಾಡಿದ್ದಾರೆ. ವೈದ್ಯರ ಜೊತೆಗೆ ನರ್ಸ್ಗಳು, ಡ್ರಿ ಗ್ರೂಪ್ ನೌಕರರು ಸೇರಿದಂತೆ ಅರೆ ವೈದ್ಯಕೀಯ ಸಿಬ್ಬಂದಿ ಕೂಡಲೇ ನೇಮಕವಾಗಬೇಕು.
ಮೊದಲು ಮಾಡಬೇಕಾದ್ದನ್ನು ಕೊನೆಯಲ್ಲಿ ಮಾಡುತ್ತಿದ್ದಾರೆ. ಕೊನೆಯಲ್ಲಿ ಯಾವುದು ಮಾಡಬೇಕಿತ್ತೋ ಅದನ್ನು ಮೊದಲು ಮಾಡಿದ್ದಾರೆ. ಸರ್ಕಾರ ಉದಾಸೀನ ತೋರಿಸಿರುವುದು ಸ್ಪಷ್ಟವಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಸಿದ್ಧತೆ ಮಾಡಿಕೊಳ್ಳದೇ ಹೋಗಿದ್ದು ಸರ್ಕಾರದ ತಪ್ಪು. ಸೋಂಕು ನಿಯಂತ್ರಣಕ್ಕೆ ಮತ್ತು ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲೇ ಇಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಬೇಜವಾಬ್ದಾರಿತನ ಎದ್ದು ಕಾಣುತ್ತದೆ. ಎರಡೂ ಸರ್ಕಾರಗಳು ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ.
ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಪ್ರತಿಪಕ್ಷಗಳು ಸಲಹೆ ನೀಡಿದರೆ ಗಂಭೀರವಾಗಿ ಪರಿಗಣಿಸುವುದಿಲ್ಲ. ವಿಧಾನ ಮಂಡಲ ಅಧಿವೇಶನ ಕರೆಯುವುದಿಲ್ಲ. ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು.
ಭ್ರಷ್ಟಾಚಾರ ನಡೆದಿದ್ದರೂ ಸುಮ್ಮನಿರಬೇಕೇ ?
ಕೊರೊನಾ ವಿಚಾರದಲ್ಲಿ ಸರ್ಕಾರ ಕೈಗೊಂಡ ಕ್ರಮಗಳಿಗೆ ನಾವು 3-4 ತಿಂಗಳು ಸಂಪೂರ್ಣವಾಗಿ ಸಹಕಾರ ನೀಡುತ್ತಾ ಬಂದೆವು. ಎಲ್ಲಿಯೂ ಮಾತನಾಡಲಿಲ್ಲ. ಹಾಗೆಂದು ಕೊರೊನಾ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದರೂ ಸುಮ್ಮನೇ ಕೂರಬೇಕಿತ್ತೇ ? ಪ್ರತಿಪಕ್ಷವಾಗಿ ನಮ್ಮ ಜವಾಬ್ದಾರಿ ನಿರ್ವಹಿಸುವುದೂ ತಪ್ಪೇ ?
ಸಚಿವ ಶ್ರೀರಾಮುಲು ಅವರು ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ಲೆಕ್ಕ ಕೊಟ್ಟಿರುವುದಾಗಿ ತಿಳಿಸಿದ್ದಾರೆ. ಗುರುವಾರ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ನಾವೂ ದಾಖಲೆಗಳನ್ನು ಮುಂದಿಡುತ್ತೇವೆ. ಒಂದು ವೆಂಟಿಲೇಟರ್ ಖರೀದಿಗೆ ತಮಿಳುನಾಡು ಸರ್ಕಾರ 4.78 ಲಕ್ಷ ರೂ. ವೆಚ್ಚ ಮಾಡಿದೆ. ಆದರೆ ಇಲ್ಲಿಯ ಸರ್ಕಾರ 15-18 ಲಕ್ಷ ರೂ. ಕೊಟ್ಟು ಖರೀದಿಸಿದೆ. ಇದನ್ನು ಭ್ರಷ್ಟಾಚಾರ ಎನ್ನದೇ ಏನೆಂದು ಕರೆಯಬೇಕು. ?
ಉಪಕರಣಗಳ ಗುಣಮಟ್ಟದ ಬಗ್ಗೆ ಮಾತನಾಡಲು ನಾನು ಸರ್ವಜ್ಞ ಅಥವಾ ತಜ್ಞ ಅಲ್ಲದಿರಬಹುದು. ಆದರೆ, ತಜ್ಞರ ಅಭಿಪ್ರಾಯ ಕೇಳಬಹುದಲ್ಲವೇ ? ನಾವು ಒಂದು ಇಲಾಖೆಯ ಲೆಕ್ಕ ಕೇಳಿಲ್ಲ. ಐದಾರು ಇಲಾಖೆಗಳು ಮಾಡಿರುವ ಖರ್ಚಿನ ಬಗ್ಗೆ ಲೆಕ್ಕ ಕೇಳಿದ್ದೇವೆ. ಮಾಹಿತಿ ಕೋರಿ ವಾರದ ಹಿಂದೆಯೇ ಪತ್ರ ಬರೆದಿದ್ದರೂ ಮುಖ್ಯ ಕಾರ್ಯದರ್ಶಿಗಳಿಂದ ಈ ವರೆಗೆ ಉತ್ತರ ಬಂದಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಹಾಗೂ ಬಿಬಿಎಂಪಿ ಸದಸ್ಯರಾದ ಶಿವರಾಜ್ ಅವರು ಹಾಜರಿದ್ದರು.
Related Articles
Thank you for your comment. It is awaiting moderation.
Comments (0)