ಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ; ಸ್ಥಳೀಯರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ
- by Suddi Team
- July 8, 2025
- 168 Views

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ಹುಲಿಗಳ ಸಂತತಿ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಈ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದ ಕಚೇರಿಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಸಚಿವ ಈಶ್ವರ ಖಂಡ್ರೆ ಹಲವಾರು ಮಹತ್ವದ ನಿರ್ಣಯಗಳನ್ನು ಕೈಗೊಂಡರು. ಇದರಲ್ಲಿ ಪ್ರಮುಖವಾದದ್ದು ಮಲೆಮಹದೇಶ್ವರ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಮುಂದಾಗುವ ಕುರಿತ ಚರ್ಚೆ. ಸುದೀರ್ಘ ಚರ್ಚೆ ನಂತರ ಸ್ಥಳೀಯ ಅಭಿಪ್ರಾಯ ಪಡೆದು ನಂತರ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಮುಂದಾಗುವ ನಿರ್ಧಾರಕ್ಕೆ ಬರಲಾಯಿತು.
ಇತರ ನಿರ್ಧಾರಗಳು:
ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ಕೃತಕ ಬುದ್ಧಿಮತ್ತೆ, ಡ್ರೋನ್ ಕ್ಯಾಮರಾ, ಸಿಸಿ ಕ್ಯಾಮರಾ ವ್ಯವಸ್ಥೆ ಇತ್ಯಾದಿ ಬಳಸಿ ನಿಗಾವಹಿಸುವ ಕೇಂದ್ರೀಕೃತ ಕಮಾಂಡ್ ಸೆಂಟರ್ ಸ್ಥಾಪನೆಗೆ ಸೂಚನೆ.
ಅರಣ್ಯ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ತಾತ್ಕಾಲಿಕ ಅಗತ್ಯಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಾರಂಭಿಸಲು ನಿರ್ದೇಶನ.
ಕಾಡಿನಂಚಿನ ಗ್ರಾಮಗಳ ಜನರೊಂದಿಗೆ ಅಧಿಕಾರಿಗಳು ಸೌಹಾರ್ದಯುತ ಸಂಬಂಧ ಬೆಳೆಸಬೇಕು ಎಂಬ ಸಲಹೆ.
ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಕೌಶಲ ತರಬೇತಿ ನೀಡುವ ಮೂಲಕ ಜನತೆಗೆ ಅರಣ್ಯ ಹಾಗೂ ವನ್ಯಜೀವಿಗಳ ಮಹತ್ವ ತಿಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರ್ಧಾರ.
Related Articles
Thank you for your comment. It is awaiting moderation.
Comments (0)