ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಕೆ; ವೇಣುಗೋಪಾಲ್ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದು,ನಾಯಕತ್ವ ಬದಲಾವಣೆ ವಿಷಯ ಅಪ್ರಸ್ತುತ,ಅಗತ್ಯ ಬಿದ್ದಾಗ ಪಕ್ಷ ಈ ಕುರಿತು ತೀರ್ಮಾನ ಮಾಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಐದು ವರ್ಷ ಸಿಎಂ ಆಗಿರುವುದಾಗಿ ತಿಳಿಸಿದ್ದಾರೆ ಎನ್ನುವ ಬಗ್ಗೆಯೇ ಮಾಧ್ಯಮಗಳಲ್ಲಿ‌ ಚರ್ಚೆಯಾಗುತ್ತಿದೆ, “ನಾನು ಪ್ರತಿ ಬಾರಿ ಕರ್ನಾಟಕಕ್ಕೆ ಬಂದಾಗಲೂ ಇದೇ ಪ್ರಶ್ನೆಗೆ ಉತ್ತರಿಸುತ್ತಿದ್ದೇನೆ,ಯಾವಾಗಲೂ ಇದೇ ಅಜೆಂಡಾ ಇರುತ್ತದೆ. ನಮ್ಮ ಪಕ್ಷದಲ್ಲಿ ಏನಾಗಬೇಕು ಎಂಬ ತೀರ್ಮಾನ ಮಾಡುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷಕ್ಕೆ ಇದೆ. ಈ ತೀರ್ಮಾನ ಮಾಡುವ ಅಧಿಕಾರವನ್ನು ನಮಗೆ ಬಿಡಿ. ಅಗತ್ಯ ಬಿದ್ದಾಗ ಪಕ್ಷ ತೀರ್ಮಾನ ಮಾಡಲಿದೆ” ಎಂದು ತಿಳಿಸಿದರು.

“ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಪಡೆದಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಲು ಭೇಟಿಯಾಗಿದ್ದೇವು. ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ನಮ್ಮ ಅಧ್ಯಕ್ಷರು ಶ್ರಮಜೀವಿ. ದಿನದ 24 ತಾಸು ಕೂಡ ಪಕ್ಷಕ್ಕಾಗಿ ದುಡಿಯುತ್ತಾರೆ. ಎಲ್ಲೇ ಅವರ ಉಪಸ್ಥಿತಿ ಬಯಸಿದರೂ ಅವರು ಪಕ್ಷದ ಕಾರ್ಯಕ್ರಮಗಳಿಗೆ ತೆರಳುತ್ತಿದ್ದರು. ಅದು ಈಶಾನ್ಯ ರಾಜ್ಯಗಳಾಗಲಿ, ಯಾವುದೇ ಮೂಲೆ ಇದ್ದರೂ ಅವರು ತೆರಳುತ್ತಿದ್ದರು” ಎಂದರು.

“ಖರ್ಗೆ ಅವರು ಮತ್ತೆ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದು, ಆರೋಗ್ಯ ಗಮನಿಸಿಕೊಂಡು ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ನಾವು ಮನವಿ ಮಾಡಿದ್ದೇವೆ. ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರತಿನಿತ್ಯ ಖರ್ಗೆ ಅವರ ಸಂಪರ್ಕದಲ್ಲಿ ಇದ್ದಾರೆ. ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ” ಎಂದು ತಿಳಿಸಿದರು.

Related Articles

Comments (0)

Leave a Comment