ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮ ನಿರ್ವಹಣೆಗೆ ಆರೋಗ್ಯ ಇಲಾಖೆಯಿಂದ ಸಂಪೂರ್ಣ ಸಹಕಾರ -ಸುರೇಶ್ ಕುಮಾರ್
- by Suddi Team
- June 1, 2020
- 16 Views

ಬೆಂಗಳೂರು: ಇದೇ ತಿಂಗಳ 25ರಿಂದ ಪ್ರಾರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ಮತ್ತು ಸಮರ್ಪಕ ನಿರ್ವಹಣೆಗೆ ವಿಶೇಷವಾಗಿ ಗೃಹ ಮತ್ತು ಆರೋಗ್ಯ ಇಲಾಖೆಗಳ ಹೆಚ್ಚಿನ ಸಹಾಯ-ಸಹಕಾರಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಪರೀಕ್ಷೆಗಳ ಪೂರ್ವಭಾವಿ ಸುರಕ್ಷತಾ ಕ್ರಮಗಳ ಕುರಿತು ವಿಧಾನಸೌಧದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದರು. ಆರೋಗ್ಯ ಇಲಾಖೆಯ ಹೆಚ್ಚಿನ ಸಹಾಯ ಸಹಕಾರದ ಅಗತ್ಯವಿದೆ ಎಂದು ಆರೋಗ್ಯ ಸಚಿವರಲ್ಲಿ ಮನವಿ ಮಾಡಿದರು.
ಕೊರೊನಾದಂತಹ ಸಾಂಕ್ರಾಮಿಕ ರೋಗದಿಂದಾಗಿ ತಡವಾಗಿ ನಡೆಯುತ್ತಿರುವ ಈ ಬಾರಿಯ ಪರೀಕ್ಷೆಯ ಸುಗಮ ನಿರ್ವಹಣೆ ಮತ್ತು ಪರೀಕ್ಷೆಯ ಪಾವಿತ್ರ್ಯ ಕಾಪಾಡುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸಹಕಾರ ಈ ಬಾರಿ ಎಂದಿಗಿಂತ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟ ಸುರೇಶ್ಕುಮಾರ್, ಕೊರೊನಾ ಹಿನ್ನೆಲೆಯಲ್ಲಿ ವಿಶೇಷವಾಗಿ ಇಲಾಖೆ ಕೈಗೊಂಡ ಕ್ರಮಗಳು ಮತ್ತು ಆರೋಗ್ಯ ಇಲಾಖೆ ಯಾವ ಯಾವ ಹಂತದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ವಿವರಿಸಿದರು.
*ಆರೋಗ್ಯ ಇಲಾಖೆಯ ಸಂಪೂರ್ಣ ಸಹಕಾರ- ಶ್ರೀರಾಮುಲು*
ಆರೋಗ್ಯ ಸಚಿವ ಶ್ರೀರಾಮುಲು ಮಾತನಾಡಿ, ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆ ಜವಾಬ್ದಾರಿಯಾಗಿದ್ದರೂ ಈ ಬಾರಿಯ ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.
ರಾಜ್ಯದ 8.5 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಹಾಗೂ ಅವರ ಪೋಷಕರು ಅತ್ಮವಿಶ್ವಾಸವನ್ನ ಕಳೆದುಕೊಳ್ಳದ ರೀತಿಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಆರೋಗ್ಯ ಸಹಾಯಕ/ ಆಶಾ ಕಾರ್ಯಕರ್ತೆಯರನ್ನ ನಿಯೋಜಿಸಲಾಗುವುದೆಂದ ಸಚಿವ ಶ್ರೀರಾಮುಲು, ಮಕ್ಕಳ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೈಕೋರ್ಟ್ ಆದೇಶ ಮಾಡಿರುವುದರಿಂದ ಇದರಲ್ಲಿ ಆರೋಗ್ಯ ಇಲಾಖೆಯ ಜವಾಬ್ದಾರಿಯೂ ಹಿರಿದಾಗಿದ್ದು, ಪರೀಕ್ಷೆಯ ಸುಗಮ ನಿರ್ವಹಣೆಗೆ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಶ್ರೀರಾಮುಲು ಹೇಳಿದರು. ಹಾಗೆಯೇ ಈ ಕುರಿತು ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆದೇಶ ಹೊರಡಿಸಬೇಕು ಮತ್ತು ಪರೀಕ್ಷೆ ಕುರಿತು ಹೆಚ್ಚಿನ ಆಸ್ಥೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಕಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳನ್ನು ರೋಗನಿವಾರಕಗೊಳಿಸಲು ಆರೋಗ್ಯ ಇಲಾಖೆ ಸಹಕರಿಸಲಿದ್ದು, ತಾಲ್ಲೂಕು ಹಂತದಲ್ಲಿ ಆಂಬುಲೆನ್ಸ್ ವ್ಯವಸ್ಥೆ, ಎಲ್ಲ ಪರೀಕ್ಷಾ ಕೇಂದ್ರಗಳು ಕ್ವಾರಂಟೈನ್ ಹಣೆಪಟ್ಟಿಯಿಂದ ಮುಕ್ತಿ, ಅನ್ಯ ರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿಸಂಪೂರ್ಣ ಸಹಕಾರ ನೀಡಲಾಗುವುದೆಂದು ಭರವಸೆ ನೀಡಿದರು.
ಸಭೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಆಯುಕ್ತ ಡಾ. ಕೆ.ಜಿ.ಜಗದೀಶ್, ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
Related Articles
Thank you for your comment. It is awaiting moderation.
Comments (0)