ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಮೂರು ಗ್ರಾಮಗಳ ಭೂಸ್ವಾಧೀನ ನಿರ್ಧಾರ ವಾಪಸ್
- by Suddi Team
- June 24, 2025
- 64 Views

ಬೆಂಗಳೂರು: ರೈತರ ನಿರಂತರ ಹೋರಾಟಕ್ಕೆ ಕಡೆಗೂ ಮಣಿದ ಸರ್ಕಾರ ಉದ್ದೇಶಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಜಮೀನ ಸ್ವಾಧೀನ ಮಾಡದಿರಲು ತೀರ್ಮಾನಿಸಿದೆ.
ವಿಧಾನಸೌಧದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ದೇವನಹಳ್ಳಿ ಶಾಸಕರೂ ಆಗಿರುವ ಕೆ.ಎಚ್. ಮುನಿಯಪ್ಪ ಅವರ ಜತೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸುದೀರ್ಘ ಸಭೆ ನಡೆಸಿದ ನಂತರ ಈ ತೀರ್ಮಾನಕ್ಕೆ ಬರಲಾಯಿತು.
ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, “ಉದ್ದೇಶಿತ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ 2 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆಗಸ್ಟ್ 27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಇದಾದ ಬಳಿಕ 2022ರ ಫೆಬ್ರವರಿ 15ರಂದು ಈ ಸಂಬಂಧ ಆದೇಶ ಹೊರಡಿಸಲಾಗಿತ್ತು. ಆದರೆ, ಹೋಬಳಿಯ ರೈತರು ಈಗಾಗಲೇ ಎರಡು ಬಾರಿ ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡಿದ್ದಾರೆ. ಜತೆಗೆ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ ಭೂಸ್ವಾಧೀನದಿಂದ ಈ ಹಳ್ಳಿಗಳ 231.23 ಎಕರೆ, 185.18 ಎಕರೆ ಮತ್ತು 78.21 ಎಕರೆಗೆ ಸ್ವಾಧೀನ ಪ್ರಕ್ರಿಯೆಯಿಂದ ವಿನಾಯಿತಿ ಕೊಡಲಾಗಿದೆ ಎಂದರು.
ಉಳಿದ ಹತ್ತು ಗ್ರಾಮಗಳಾದ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆ ಬಚ್ಚೇನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮುದ್ದೇನಹಳ್ಳಿ ಮತ್ತು ಹಾಡ್ಯಾಳ ವ್ಯಾಪ್ತಿಯಲ್ಲಿನ 1,232 ಎಕರೆ ಭೂಸ್ವಾಧೀನ ನಡೆಯಲಿದೆ. ಅದರಲ್ಲೇನೂ ಬದಲಾವಣೆ ಇಲ್ಲ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಜಿಲ್ಲಾಧಿಕಾರಿ ಸೂಕ್ತ ಪರಿಹಾರ ಮೊತ್ತ ನಿಗದಿ ಪಡಿಸಲಿದ್ದಾರೆ ಅಥವಾ ಸಂತ್ರಸ್ತ ರೈತರು ಆಸಕ್ತಿ ವ್ಯಕ್ತಪಡಿಸಿದರೆ 1 ಎಕರೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ 10,771 ಚದರ ಅಡಿ ಜಮೀನನ್ನು ಬೇಕಾದರೂ ಕೊಡಲು ಅವಕಾಶವಿದೆ. ಈ ಜಾಗವನ್ನು ರೈತರು ವಾಣಿಜ್ಯೋದ್ದೇಶಗಳಿಗಾಗಿ ಬಳಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಸಚಿವ ಮುನಿಯಪ್ಪ, ರೈತರು ಸರ್ಕಾರದ ತೀರ್ಮಾನವನ್ನು ಗೌರವಿಸಿ, ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.ಈ ರೀತಿ ರಾಜ್ಯದಲ್ಲಿ ಎಲ್ಲಿಯೂ ಜಮೀನನ್ನು ಸ್ವಾಧೀನದಿಂದ ಕೈಬಿಟ್ಟ ನಿರ್ದಶನ ಇಲ್ಲ. ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಅವರು ರೈತರ ಪರವಾದ ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಮನ್ನಿಸಿ ಪ್ರತಿಭಟನೆ ಕೈಬಿಡಬೇಕು ಎಂದು ಮುನಿಯಪ್ಪ ಹೇಳಿದರು.
Related Articles
Thank you for your comment. It is awaiting moderation.
Comments (0)