ಆಡಳಿತದಲ್ಲಿ ಕನ್ನಡ ಬಳಕೆ ಕಡ್ಡಾಯ; ಸೂಚನೆ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯದ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುವ ಕುರಿತು ಹಲವು ಬಾರಿ ಸೂಚಿಸಿದ್ದರೂ, ಪರಿಣಾಮಕಾರಿಯಾಗಿ ಜಾರಿಯಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಎಲ್ಲ ಇಲಾಖೆಗಳೂ ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ಕನ್ನಡ ಭಾಷೆಯಲ್ಲಿಯೇ ಆಡಳಿತ ನಡೆಸುವ ಬಗ್ಗೆ ಈಗಾಗಲೇ ಹಲವು ಬಾರಿ ಸೂಚನೆಗಳನ್ನು ನೀಡಿ ಸುತ್ತೋಲೆಗಳನ್ನು ಹೊರಡಿಸಿದ್ದರೂ, ಅದು ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವರದಿ ಮಾಡುತ್ತಲೇ ಇದೆ. ಆದ್ದರಿಂದ, ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಕನ್ನಡ ಇರಬೇಕು ಎಂದು ‘ಕರ್ನಾಟಕ ರಾಜ್ಯ ಭಾಷಾ ಕಾಯ್ದೆ- 1963’ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಲು ತಿಳಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಸೇರಿ ಎಲ್ಲ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ. ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವನ್ನು ಕನ್ನಡದಲ್ಲಿ ಭರ್ತಿ ಮಾಡುವಂತೆ, ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರುವಂತೆಯೂ ತಿಳಿಸಲಾಗಿದೆ. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡಾವಳಿಗಳನ್ನು ಕನ್ನಡದಲ್ಲಿ ತಯಾರಿಸಿ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವಂತೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದ ಎಲ್ಲ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲೇ ಇರುವಂತೆ ಸೂಚಿಸಲಾಗಿದೆ ಎಂದು ಶಾಲಿನಿ ರಜನೀಶ್ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳನ್ನು ಕನ್ನಡದಲ್ಲಿ ಮಾಡುವಂತೆ ಸೂಚಿಸಿದ್ದರೂ, ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದಿರುವುದನ್ನು ಗಮನಿಸಿರುವ ಮುಖ್ಯಮಂತ್ರಿಗಳು, ಕನ್ನಡದಲ್ಲಿರದ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ನಿರ್ದೇಶಿಸಿದ್ದಾರೆ. ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ. ಆದ್ದರಿಂದ, ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶಗಳಲ್ಲಿ ನೀಡಿರುವ ಸೂಚನೆಗಳನ್ನು ಸರ್ಕಾರ, ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಅನುದಾನಿತ ಸಂಘ-ಸಂಸ್ಥೆಗಳ ಎಲ್ಲ ಅಧಿಕಾರಿ, ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮುಖ್ಯ ಕಾತ್ಯದರ್ಶಿಗಳ ಸುತ್ತೋಲೆಯಲ್ಲಿ ಹೇಳಲಾಗಿದೆ.

 

Related Articles

Comments (0)

Leave a Comment